ADVERTISEMENT

ಮಡಿಕೇರಿ | ಪ್ರಜಾಪ್ರಭುತ್ವ ದಿನಾಚರಣೆ: ಮಡಿಕೇರಿಯಿಂದ ಬೆಂಗಳೂರಿಗೆ ಬೈಕ್‌ ಜಾಥಾ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 3:13 IST
Last Updated 15 ಸೆಪ್ಟೆಂಬರ್ 2025, 3:13 IST
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಡಿಕೇರಿಯಲ್ಲಿ ಭಾನುವಾರ ಬೈಕ್‌ ಜಾಥಾಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಹಾಗೂ ಡಿವೈಎಸ್‌ಪಿ ಸೂರಜ್ ಹಸಿರು ನಿಶಾನೆ ತೋರಿದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಡಿಕೇರಿಯಲ್ಲಿ ಭಾನುವಾರ ಬೈಕ್‌ ಜಾಥಾಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಹಾಗೂ ಡಿವೈಎಸ್‌ಪಿ ಸೂರಜ್ ಹಸಿರು ನಿಶಾನೆ ತೋರಿದರು   

ಮಡಿಕೇರಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನಗರದಿಂದ 10 ಮಂದಿ ಬೈಕ್‌ ಮೂಲಕ ಬೆಂಗಳೂರಿಗೆ ಜಾಥಾ ಹೊರಟರು.

ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಡಿವೈಎಸ್‌ಪಿ ಸೂರಜ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿದರು.

ಪ್ರಜಾಪ್ರಭುತ್ವದ ತತ್ವಗಳಿರುವ ಭಿತ್ತಿಪತ್ರಗಳನ್ನು ಕಾರ್ಯಕರ್ತರು ಪ್ರದರ್ಶಿಸಿದರು. ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಕೂಗುತ್ತಾ, ಬೆಂಗಳೂರಿನತ್ತ ಬೈಕ್‌ನಲ್ಲಿ ಹೊರಟರು.

ADVERTISEMENT

‘ಪ್ರತಿ ಜಿಲ್ಲೆಯಿಂದಲೂ 10 ಮಂದಿ ಬೈಕ್‌ನಲ್ಲಿ ಬೆಂಗಳೂರಿಗೆ ಜಾಥಾ ರೂಪದಲ್ಲಿ ಬರುತ್ತಿದ್ದು, ಎಲ್ಲರೂ ಸೆ. 15ರಂದು ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಜಮಾವಣೆಯಾಗಲಿದ್ದಾರೆ. ಎಲ್ಲ ಜಿಲ್ಲೆಯಿಂದಲೂ ಬಂದ ಬೈಕ್‌ ಸವಾರರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯುವ ವಿಧಾನಸೌಧಕ್ಕೆ ಕಂಠೀರವ ಕ್ರೀಡಾಂಗಣದಿಂದ ತೆರಳಲಿದ್ದಾರೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ತಿಳಿಸಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಡಿಕೇರಿಯಲ್ಲಿ ಭಾನುವಾರ ನಡೆದ ಬೈಕ್‌ ಜಾಥಾದಲ್ಲಿ 10 ಮಂದಿ ಭಾಗವಹಿಸಿದ್ದರು

ಇಂದು ಸೈಕಲ್ ಜಾಥಾ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಸೆ. 15ರಂದು ಬೆಳಿಗ್ಗೆ 7.30ಕ್ಕೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಸೈಕಲ್ ಜಾಥಾ ಏರ್ಪಡಿಸಲಾಗಿದೆ. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸಾರ್ವಜನಿಕರು ಅಧಿಕಾರಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಳಿಗ್ಗೆ 10.30ಕ್ಕೆ ನಗರದ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದಾರೆ.

ಶಾಸಕರಾದ ಡಾ.ಮಂತರ್‌ಗೌಡ ಎ.ಎಸ್.ಪೊನ್ನಣ್ಣ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಡಾ.ಶ್ರೀಧರ ಆರ್.ಹೆಗಡೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.