ADVERTISEMENT

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಭೆ: ಜೆಜೆಎಂ; 120 ಕಾಮಗಾರಿ ಪೈಕಿ 44 ಪೂರ್ಣ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 2:53 IST
Last Updated 19 ಆಗಸ್ಟ್ 2025, 2:53 IST
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಮಾತನಾಡಿದರು
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಮಾತನಾಡಿದರು   

ಮಡಿಕೇರಿ: ಜಲ ಜೀವನ್ ಮಿಷನ್ ಯೋಜನೆಯಡಿ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 3 ಹಂತಗಳಲ್ಲಿ 120 ಕಾಮಗಾರಿಗಳು ಮಂಜೂರಾಗಿದ್ದು, 44 ಮಾತ್ರ ಪೂರ್ಣಗೊಂಡಿರುವ ವಿಷಯ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪವಾಯಿತು.

ಇದನ್ನು ಕೇಳಿ ಅಸಮಾಧಾನ ವ್ಯಕ್ತಪಡಿಸಿದ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್, ‘ಇನ್ನುಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿ ಊಟದ ನೀಡುತ್ತಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮಾತ್ರ ಇಳಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಎಸ್‌ಎಸ್‌ಎಲ್‌ಸಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾಡಿ ಜನರಿಗೆ ಸಿಗುತ್ತಿರುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

‘6 ಆಶ್ರಮ ಶಾಲೆಗಳಲ್ಲಿ 700ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದು, ಎಲ್ಲಾ ಶಾಲೆಗಳು ಉತ್ತಮ ರೀತಿಯಲ್ಲಿ ನಿರ್ವಹಣೆ ಕೈಗೊಳ್ಳಲಾಗುತ್ತಿದೆ ಮತ್ತು ಹಾಡಿ ಜನರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮೀನು ಹಿಡಿಯುವ ಕಿಟ್ ಹಾಗೂ ಮೀನು ಸಾಕಾಣಿಕೆ ಮಾಡುವ ರೈತರಿಗೆ ಅರ್ಹತೆ ಆಧಾರದ ಮೇಲೆ ಮೀನುಮರಿ ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಪಶು ಸಂಗೋಪನೆ ಇಲಾಖೆಯಿಂದ ಈಗಾಗಲೇ ರಾಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆ, ಚರ್ಮಗಂಟು ನಿವಾರಣಾ ಲಸಿಕೆ ನೀಡಲಾಗಿದ್ದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಹೊರತುಪಡಿಸಿ ಹಾಲು ಮಾರಾಟ ಕೇಂದ್ರಗಳು ಇಲ್ಲವಾದ ಕಾರಣ ಹಸು ಸಾಕಾಣಿಕೆ ಮಾಡುವವರ ಸಂಖ್ಯೆಯು ಕಡಿಮೆಯಾಗಿದೆ ಎಂದು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶ ಗಿರೀಶ್ ಅವರು ಮಾಹಿತಿ ನೀಡಿದರು.

ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲು ಕಂಬಗಳನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದರಿಂದ ರಸ್ತೆಗೆ ಹಾನಿಯಾಗುತ್ತಿರುವುದು ಕಂಡುಬಂದಿದೆ. ಈ ಕುರಿತು ಕ್ರಮ ವಹಿಸಲು ಎಂಜಿನಿಯರ್‌ಗಳಿಗೆ ತಿಳಿಸಿದರು.

ಕೃಷಿ, ಸಹಕಾರ, ಕಂದಾಯ, ಅಬಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಸೋಮವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು

ವನ್ಯಜೀವಿಗಳ ದಾಳಿ; 618 ಪ್ರಕರಣ ದಾಖಲು

ಕಾಡಾನೆ ಮತ್ತು ಹುಲಿ ದಾಳಿಯಿಂದ ವಿರಾಜಪೇಟೆಯಲ್ಲಿ ಒಟ್ಟು 618 ಪ್ರಕರಣಗಳು ದಾಖಲಾಗಿವೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು. ಈ ಪೈಕಿ ಈಗಾಗಲೇ ಹಲವು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ‘ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.