ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಹಗಲು ತಗ್ಗಿದ್ದ ಮಳೆ ರಾತ್ರಿ ಮತ್ತೆ ಬಿರುಸಾಯಿತು. ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಸೆಂ.ಮೀನಷ್ಟು ಮಳೆ ಸುರಿದಿದೆ.
ಗಾಳಿಬೀಡು ವ್ಯಾಪ್ತಿಯಲ್ಲಿ 10, ಮಡಿಕೇರಿ, ಭಾಗಮಂಡಲ ಭಾಗಗಳಲ್ಲಿ 5 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಗಾಳಿಯು ಹಿಂದಿನ ದಿನಗಳಿಗಿಂತಲೂ ಅತಿ ವೇಗವಾಗಿ ಬೀಸುತ್ತಿದೆ. ಹಲವೆಡೆ ವಿದ್ಯುತ್ ಕಂಬಗಳು ಮುರಿದಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಚಳಿಯ ವಾತಾವರಣ ಮೂಡಿದೆ.
ಹಾರಂಗಿ ಜಲಾಶಯಕ್ಕೆ 12,552 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 10,791 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಮಡಿಕೇರಿ ನಗರಕ್ಕೆ ವಿದ್ಯುತ್ ಪೂರೈಕೆ ಸ್ಥಗಿತ
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನಲ್ಲಿ 66 ಕೆ.ವಿ ಸಾಮರ್ಥ್ಯದ ವಿದ್ಯುತ್ ಲೈನಿನ ಮೇಲೆ ಮರ ಬಿದ್ದು ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಬುಧವಾರ ನಸುಕಿನಿಂದ ವಿದ್ಯುತ್ ಪೂರೈಕೆ ಕಡಿತಗೊಂಡಿದೆ.
ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಮಧ್ಯಾಹ್ನದ ವೇಳೆ ದುರಸ್ತಿ ಕಾರ್ಯ ಮುಗಿಯಬಹುದು ಎಂದು ಸೆಸ್ಕ್ ಮೂಲಗಳು ತಿಳಿಸಿವೆ.
ಬಿರುಸಿನ ಗಾಳಿಗೆ ಹಲವೆಡೆ ಮರಗಳು ಧರೆಗೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಬೀಸುತ್ತಿರುವ ವೇಗದ ಗಾಳಿಗೆ ಹಲವೆಡೆ ಮರಗಳು ಧರೆಗುರುಳಿವೆ.
ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಮರವೊಂದು ರಸ್ತೆಗೆ ಉರುಳಿದ್ದು, ಸಂಪರ್ಕ ಕಡಿತಗೊಂಡಿದೆ.
ಐಗೂರು ಸಮೀಪವೂ ಮರಗಳು ರಸ್ತೆಗೆ ಉರುಳಿವೆ. ಮರಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.