ಮಡಿಕೇರಿ: ತಲಕಾವೇರಿ ಕ್ಷೇತ್ರವು ತೀಥೋದ್ಭವಕ್ಕೆ ಸಜ್ಜಾಗಿದೆ. ಬುಧವಾರ ಸಂಜೆ 6.43ಕ್ಕೆ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ.
ತೀರ್ಥೋದ್ಭವದ ವೇಳೆ ಭಕ್ತರ ನೂಕುನುಗ್ಗಲು ತಡೆಯಲು ಪ್ರವೇಶ ದ್ವಾರದಿಂದ ಸ್ನಾನಕೊಳದ ತನಕ ಬ್ಯಾರಿಕೇಡ್ ಅಳವಡಿಸಲಾಗಿದೆ. ಮಡಿಕೇರಿಯಿಂದ ತಲಕಾವೇರಿಗೆ ತೆರಳಲು ವಿಶೇಷ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಭಾರಿ ಭದ್ರತೆ: ಈ ವರ್ಷ ಸಂಜೆ ತೀರ್ಥೋದ್ಭವನಡೆಯುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಕೇರಳ, ತಮಿಳುನಾಡಿನಿಂದಲೂ ಭಕ್ತರು ಆಗಮಿಸುವ ಸಾಧ್ಯತೆಯಿದ್ದು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜತೆಗೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಥಮ ಬಾರಿಗೆ ತೀರ್ಥೋದ್ಭವ ನೋಡಲು ಬರುತ್ತಿದ್ದು, ಭದ್ರತೆ ಹೆಚ್ಚಿಸಲಾಗಿದೆ.
ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಊಟೋಪಚಾರ ಕಲ್ಪಿಸಲು ಸಿದ್ಧತೆ ನಡೆದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗೀತ ಗಾಯನ, ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ತಲಕಾವೇರಿ ದೇವಾಲಯದ ಸುತ್ತ ಹೆಚ್ಚಿನ ಬೆಳಕಿಗಾಗಿ ಫೋಕಸ್ ಲೈಟ್ ವ್ಯವಸ್ಥೆ ಹಾಗೂ ಧ್ವನಿವರ್ಧಕಗಳನ್ನು ಅಳವಡಿಸಲಾಗುವುದು. ಭದ್ರತೆ ದೃಷ್ಟಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ರಾತ್ರಿ ವೇಳೆ ಭಕ್ತರ ಸಂಚಾರಕ್ಕೆ ಅನುಕೂಲ ಆಗಲೆಂದು ಎಂದು 12 ಕಿ.ಮೀ ದೂರದಿಂದ ಟ್ಯೂಬ್ ಲೈಟ್ ಅಳವಡಿಸಲಾಗಿದೆ.
ತಲಕಾವೇರಿಯಲ್ಲಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ. 20 ಕಡೆ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.