ADVERTISEMENT

ಪ್ರತಿಭೆ ಅನಾವರಣಕ್ಕೆ ಕಾವೇರಿಯನ್ಸ್ ಫೆಸ್ಟ್‌ ‌ವೇದಿಕೆ

ಫೆಸ್ಟ್‌ಗೆ ಚಾಲನೆ ನೀಡಿದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಪ್ರೊ.ಸಿ.ಜಿ.ಕುಶಾಲಪ್ಪ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 6:23 IST
Last Updated 31 ಅಕ್ಟೋಬರ್ 2025, 6:23 IST
ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಕಾವೇರಿಯನ್ಸ್‌ ಫೆಸ್ಟ್‌ಗೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ನಿವೃತ್ತ ಡೀನ್ ಪ್ರೊ.ಸಿ.ಜಿ. ಕುಶಾಲಪ್ಪ ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ಕಾವೇರಿಯಪ್ಪ, ಉಪ ಪ್ರಾಂಶುಪಾಲರಾದ ಪ್ರೊ.ಭಾರತಿ ಹಾಜರಿದ್ದರು
ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಕಾವೇರಿಯನ್ಸ್‌ ಫೆಸ್ಟ್‌ಗೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ನಿವೃತ್ತ ಡೀನ್ ಪ್ರೊ.ಸಿ.ಜಿ. ಕುಶಾಲಪ್ಪ ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ಕಾವೇರಿಯಪ್ಪ, ಉಪ ಪ್ರಾಂಶುಪಾಲರಾದ ಪ್ರೊ.ಭಾರತಿ ಹಾಜರಿದ್ದರು   

ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಕಾವೇರಿಯನ್ಸ್ ಫೆಸ್ಟ್‌ಗೆ ಕಾಲೇಜಿನ ಆವರಣದಲ್ಲಿನ ಕಾವೇರಿ ಮಾತೆಯ ಪ್ರತಿಮೆಗೆ ಅತಿಥಿಗಳು ಗುರುವಾರ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.

ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಪ್ರೊ.ಸಿ.ಜಿ.ಕುಶಾಲಪ್ಪ ಟ್ರೋಫಿ ಅನಾವರಣಗೊಳಿಸಿ ಮಾತನಾಡಿ, ಕಾವೇರಿ ಕಾಲೇಜು ಕಳೆದ 57 ವರ್ಷಗಳಿಂದಲೂ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದೀಗ ಕಾವೇರಿಯನ್ಸ್ ಫೆಸ್ಟ್ ಎಂಬ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯ ಅನಾವರಣಕ್ಕೆ ಒಂದು ಸುಂದರ ವೇದಿಕೆ ಒದಗಿಸಿಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಸೋಲು ಗೆಲುವನ್ನು ಬದಿಗಿಟ್ಟು, ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಂಡು ಸಂಭ್ರಮಿಸಬೇಕು. ವಿದ್ಯಾಭ್ಯಾಸದ ನಂತರ ಬದುಕು ಸಾಗಿಸಲು ಕೊಡಗಿನಲ್ಲಿಯೇ ಸಾಕಷ್ಟು ಅವಕಾಶಗಳಿದ್ದು, ಅದರ ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ADVERTISEMENT

ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ.ಪಿ.ಅಚ್ಚಯ್ಯ, ಕಾವೇರಿ ಕಾಲೇಜು ಬಿಬಿಎ ವಿಭಾಗದ ವತಿಯಿಂದ ಆಯೋಜಿಸಿರುವ ಫುಡ್ ಫೆಸ್ಟ್‌ಗೆ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾವೇರಿ ಎಜುಕೇಷನ್ ಸೊಸೈಟಿ ಖಜಾಂಚಿ ಸಿ.ಡಿ.ಮಾದಪ್ಪ ಮಾತನಾಡಿ, ಕಾವೇರಿ ಕಾಲೇಜಿನ ಎಲ್ಲ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಶ್ರಮಪಟ್ಟು, ದಾನಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಚಮಾಡ ಸುಭಾಷ್ ಸುಬ್ಬಯ್ಯ, ಪ್ರಾಂಶುಪಾಲ ಪ್ರೊ.ಎಂ.ಬಿ. ಕಾವೇರಿಯಪ್ಪ, ಉಪ ಪ್ರಾಂಶುಪಾಲರಾದ ಎಂ.ಎಸ್. ಭಾರತಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ಮಾದಯ್ಯ, ಕಾವೇರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಕೆ. ಶ್ರೀನಿವಾಸ್, ಐಕ್ಯೂ ಎಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಪಿ.ಪಿ. ಸವಿತಾ, ಕೆ.ಕೆ.ಚಿತ್ರಾವತಿ, ಹಿರಿಯ ಉಪನ್ಯಾಸಕರಾದ ಎಂ.ಕೆ.ಪದ್ಮ, ಸಿ.ಪಿ.ಸುಜಯ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.