ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕುಂದ ಕಾಡಿನ ಗಣೇಶೋತ್ಸವ ಸೇವಾ ಸಮಿತಿಯಿಂದ 19ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಕೆಸರು ಗದ್ದೆ ಕ್ರೀಡೋತ್ಸವ ನಡೆಯಿತು.
ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಬೆಟ್ಟಗೇರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ನಾಪೋಕ್ಲುವಿನ ವಿವೇಕಾನಂದ ತಂಡ ದ್ವಿತೀಯ ಸ್ಥಾನ ಗಳಿಸಿತು. ಕಬಡ್ಡಿ ಪಂದ್ಯಾಟದಲ್ಲಿ ಬೆಟ್ಟಗೇರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಕಕ್ಕುಂದ ಕಾಡಿನ ಗಣಪತಿ ಸೇವಾ ಸಮಿತಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಮಹಿಳೆಯರಿಗೂ ಹಗ್ಗಜಗ್ಗಾಟ ಸ್ಪರ್ಧೆ, ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಸಮಿತಿಯಿಂದ ಪ್ರತಿಷ್ಠಾಪಿಸಲಾದ ಗಣೇಶಮೂರ್ತಿಗಳ ವಿಸರ್ಜನೆ ಬುಧವಾರ ನಡೆಯಲಿದೆ. ಅಂದು ಮಹಾ ಪೂಜೆಯ ಬಳಿಕ ಮಧ್ಯಾಹ್ನ ಒಂದು ಗಂಟೆಗೆ ಅನ್ನದಾನ ನಡೆಯಲಿದೆ. ಬಳಿಕ ಉಡುಪಿಯ ವಿಷ್ಣುಮೂರ್ತಿ ಕಲಾ ತಂಡದಿಂದ ಕೀಲುಕುದುರೆ ಮತ್ತು ಕರಗ ನೃತ್ಯ, ಗದಗದ ಮಹಿಳಾ ತಂಡದಿಂದ ಡೋಲು ಕುಣಿತ, ಬ್ಯಾಂಡ್ ಮತ್ತು ಚಂಡೆ ಮೇಳದೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಸಾಗಿ ಉತ್ಸವ ಮೂರ್ತಿಯನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದು ಕಕ್ಕುಂದಕಾಡಿನ ಗಣಪತಿ ಸೇವಾ ಸಮಿತಿ ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.