ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸರ್ವ ಸದಸ್ಯರ ಸಭೆ ಮಡಿಕೇರಿಯಲ್ಲಿ ಮಂಗಳವಾರ ನಡೆಯಿತು.
ಮಡಿಕೇರಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಇಲ್ಲಿ ಮಂಗಳವಾರ ನಡೆದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಅಕಾಡೆಮಿಯ ನೂತನ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ ಮೊದಲ ಸಭೆಯಲ್ಲಿ ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಸದಸ್ಯರ ಅಭಿಪ್ರಾಯಗಳೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡುವಂತೆ ಒಮ್ಮತದ ತೀರ್ಮಾನಕ್ಕೆ ಬರಲಾಯಿತು.
ಕಕ್ಕಡ 18 ಹಾಗೂ ಬೇಲ್ನಮ್ಮೆ ಕಾರ್ಯಕ್ರಮವನ್ನು ಸಂಸ್ಕೃತಿಯ ಅನಾವರಣದೊಂದಿಗೆ ಮಡಿಕೇರಿ, ಅಮ್ಮತ್ತಿ, ಪೊನ್ನಂಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ನಡೆಸಲು ಸದಸ್ಯರಿಗೆ ಜವಾಬ್ದಾರಿ ಕೊಡಲಾಯಿತು.
ಮಂಗಳೂರಿನಲ್ಲಿ ಆಯೋಜಿಸ ಲಿರುವ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಕೊಡವ ಸಂಸ್ಕೃತಿ ಹಾಗೂ ಸಾಹಿತ್ಯದ ಪ್ರದರ್ಶನಕ್ಕೆ ಪೂರಕವಾಗಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲು ತೀರ್ಮಾನಿಸಲಾಯಿತು.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಿರುಚಿತ್ರ ಸ್ಪರ್ಧೆಗಳನ್ನು ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಮತ್ತು ವಿದ್ಯಾ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳುವಂತೆ ನಿರ್ಧರಿಸಲಾಯಿತು.
ಕರ್ನಾಟಕ ಏಕೀಕರಣ ಹಾಗೂ ಕೊಡವ ಭಾಷೆ, ಸಂಸ್ಕೃತಿಯಿಂದ ಕನ್ನಡದ ಬೆಳವಣಿಗೆ ಒಳಗೊಂಡಂತೆ ಮಕ್ಕಳಿಗೆ ಏರ್ಪಡಿಸಲಾಗಿರುವ ಸ್ಪರ್ಧಾ ಕಾರ್ಯಕ್ರಮಗಳಿಗೆ ಪ್ರತಿ ವಿದ್ಯಾಸಂಸ್ಥೆಗಳಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ಕಳುಹಿಸಿಕೊಡುವಂತೆ ತಿಳಿಸಲಾಯಿತು.
ಕಾರ್ಯಕ್ರಮಗಳಿಗೆ ಅಕಾಡೆಮಿಯ ಸದಸ್ಯರ ಸಂಚಾಲಕತ್ವ ಹಾಗೂ ಜಿಲ್ಲೆಯ ತಜ್ಞರನ್ನು ಆಹ್ವಾನಿಸಬೇಕು. ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಈಗಾಗಲೇ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಸಭೆ ನಡೆಸಲಾಗಿದೆ ಎಂದರು.
ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಡ ದಿನು ಬೋಜಪ್ಪ, ಕೊಡಿಜಮ್ಮಂಡ ಎಂ.ಬಾಲಕೃಷ್ಣ, ಪೊನ್ನೀರ ಯು.ಗಗನ್, ಕುಡಿಯರ ಕಾವೇರಪ್ಪ, ನಾಯಂದೀರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ.ಎ.ಸಂಜು ಕಾವೇರಪ್ಪ, ನಾಪಂಡ ಸಿ.ಗಣೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ಗಿರೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.