ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ‘ಎ’ ಮತ್ತು ‘ಬಿ’ ವೃಂದದ ಪಟ್ಟಿಯಲ್ಲಿರುವ ಮನೆಗಳ ಮಾಲೀಕರಿಗೂ ಬಾಡಿಗೆ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
2019–20ನೇ ಸಾಲಿನಲ್ಲಿ ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಅಧಿಕೃತವಾದ ಮನೆಗಳಿಗೆ ಬಾಡಿಗೆ ಮೊತ್ತ ಪಾವತಿಸಲಾಗಿದೆ. ಅದೇ ರೀತಿ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ‘ಎ’ ಮತ್ತು ‘ಬಿ’ ವೃಂದದ ಪಟ್ಟಿಯಲ್ಲಿರುವ ಮನೆಗಳಿಗೆ ಬಾಡಿಗೆ ಹಣವನ್ನು ಪಾವತಿಸುವ ಸಂಬಂಧ ಫೆ.10ರಂದು ಬೆಂಗಳೂರಿನಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎದು ಅವರು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿ ತಿಂಗಳಿಗೆ ₹5 ಸಾವಿರದಂತೆ ಗರಿಷ್ಠ 10 ತಿಂಗಳಿಗೆ ₹50 ಸಾವಿರ ಬಾಡಿಗೆ ಹಣ ಪಾವತಿಸಲು ತೀರ್ಮಾನಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ 2019–20ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಒಟ್ಟು 228 ‘ಎ’ ಮತ್ತು ‘ಬಿ’ ವೃಂದದ ಮನೆಗಳ ಮಾಲೀಕರಿಗೆ ಮೊದಲನೇ ಹಂತದಲ್ಲಿ ಒಟ್ಟು 5 ತಿಂಗಳ ಬಾಡಿಗೆ ಹಣವಾಗಿ ತಲಾ ₹25 ಸಾವಿರದಂತೆ ಒಟ್ಟು ₹57 ಲಕ್ಷವನ್ನು ಅವರವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಉಳಿದ ಐದು ತಿಂಗಳ ಬಾಡಿಗೆ ಹಣವನ್ನು ಮುಂದಿನ ದಿನಗಳಲ್ಲಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು. ಹಾನಿಗೊಳಗಾದ ಅನಧಿಕೃತ ಮನೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆ ಪ್ರಕ್ರಿಯೆ ಜಾರಿಯಲ್ಲಿದೆ. ಸಂಬಂಧಪಟ್ಟ ಫಲಾನುಭವಿಗಳು ಅವರವರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿಕೊಳ್ಳಲು ಜಿಲ್ಲಾಧಿಕಾರಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.