ADVERTISEMENT

ಅತಿಥಿ ಉಪನ್ಯಾಸಕರಿಗೆ ಪರೀಕ್ಷಾ ಕೆಲಸ, ಕಾರ್ಯದ ಸಂಭಾವನೆ ನೀಡಿ: ಶ್ಯಾಮ್ ಪ್ರಸಾದ್

ಹೋರಾಟದ ಎಚ್ಚರಿಕೆ ನೀಡಿದ ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 6:45 IST
Last Updated 19 ಅಕ್ಟೋಬರ್ 2024, 6:45 IST
   

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವು ತಕ್ಷಣವೇ ಪರೀಕ್ಷಾ ಕೆಲಸ ಮತ್ತು ಕಾರ್ಯದ ಸಂಭಾವನೆ ನೀಡಬೇಕು ಎಂದು ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್ ಒತ್ತಾಯಿಸಿದ್ದಾರೆ.

ಅತಿಥಿ ಉಪನ್ಯಾಸಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಕೊಡಗು ವಿಶ್ವ ವಿದ್ಯಾನಿಲಯದ ಆಡಳಿತ ವೈಫಲ್ಯವೇ ಕಾರಣ. ಒಂದು ವೇಳೆ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

2023ರ ಆಗಸ್ಟ್ ಮತ್ತು ಸೆಪ್ಟೆಂಬರ್ ಹಾಗೂ 2024ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಕೆಲಸ ಹಾಗೂ 2024ರ ಜುಲೈ ತಿಂಗಳಿನಲ್ಲಿ ನಡೆಸಿದ ಉತ್ತರ ಪತ್ರಿಕೆಯ ಮೌಲ್ಯಮಾಪನದ ಸಂಭಾವನೆಯನ್ನು ನೀಡದೆ ಇರುವುದರಿಂದ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ ಎಂದು ಅವರು ದೂರಿದರು.

ADVERTISEMENT

ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಆದರೂ ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಕೊಡಗು ವಿಶ್ವ ವಿದ್ಯಾನಿಲಯದ ಆಡಳಿತ ವೈಫಲ್ಯವೇ ಮಾತ್ರ ಕಾರಣವಲ್ಲ, ಜೊತೆಗೆ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ದುರ್ಬಲ ಆಡಳಿತವೂ ಕಾರಣವಾಗಿದೆ. ಇದರಿಂದಾಗಿ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ಇಡಿಗಂಟು ಸೌಲಭ್ಯ ಮರೀಚಿಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ, ಪ್ರಸ್ತುತ ಸಾಲಿನ ವರ್ಗಾವಣೆ ಮತ್ತು 1,242 ಸಹ ಪ್ರಾಧ್ಯಾಪಕರ ಕೌನ್ಸಿಲಿಂಗ್ ಪ್ರಕ್ರಿಯೆಯಿಂದಾಗಿ 5,200 ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಆಡಳಿತ ವ್ಯವಸ್ಥೆ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಸ್ಪಂದಿಸದೆ ಕಡೆಗಣಿಸಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ತಕ್ಷಣ ಜನಪ್ರತಿನಿಧಿಗಳು ಹಾಗೂ ಕೊಡಗು ವಿವಿಯ ಪ್ರಮುಖರು ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮತ್ತೊಮ್ಮೆ ಹೋರಾಟ ನಡೆಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.