ಮಡಿಕೇರಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22 ರಿಂದ ಆರಂಭವಾಗಲಿದ್ದು, 2ನೇ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರ ನಡೆಯಿತು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಿದ್ಧತೆ ಬಗ್ಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು, ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರ ನಿಯೋಜನೆ, ಕಿಟ್ ವಿತರಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.
ಸಮೀಕ್ಷೆದಾರರ ನಿಯೋಜನೆ ಮತ್ತಿತರ ಸಂಬಂಧ ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸಮೀಕ್ಷೆಗೆ ಕುರಿತು ಕಂದಾಯ, ಶಾಲಾ ಶಿಕ್ಷಣ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪಾತ್ರ ಮುಖ್ಯ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮೀಕ್ಷೆ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಸೆ. 22ರಿಂದ ಪ್ರತೀ ದಿನ ಸಂಜೆ ವೇಳೆಗೆ ವಿಡಿಯೊ ಸಂವಾದ ಮೂಲಕ ಮಾಹಿತಿ ಪಡೆಯಲಾಗುವುದು ಎಂದೂ ಅವರು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್ ಮಾತನಾಡಿ, ‘ಜಿಲ್ಲೆಯಲ್ಲಿ 1,132 ಸಮೀಕ್ಷಾದಾರರು ಮತ್ತು 71 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರ ಮ್ಯಾಪಿಂಗ್ ಕಾರ್ಯವು ಶೇ 90ರಷ್ಟು ಪೂರ್ಣಗೊಂಡಿದೆ. ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.
ಈಗಾಗಲೇ ಪ್ರತೀ ಮನೆಗಳಿಗೂ ಸ್ಟಿಕ್ಕರ್ಗಳನ್ನು ಅಂಟಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರತೀ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಈ ವೇಳೆ ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ಕೃಷ್ಣಮೂರ್ತಿ ಅವರು ಎರಡನೇ ಹಂತದ ತರಬೇತಿ ಕುರಿತು ಮಾತನಾಡಿದರು.
ಈ ವೇಳೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜ ಅವರು ಸಮೀಕ್ಷೆ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾಯ ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆದಾರರನ್ನು ನಿಯೋಜಿಸಿದ್ದಾರೆ ಎಂದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ‘ಸಮೀಕ್ಷೆದಾರರು ತಮ್ಮ ತಮ್ಮ ಹಂತದಲ್ಲಿ ಯಾರೂ ಬಿಟ್ಟು ಹೋಗದಂತೆ ಸಮೀಕ್ಷೆ ನಡೆಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.