ಗೋಣಿಕೊಪ್ಪಲು: ಬಾಳೆಲೆ ವಿಜಯಲಕ್ಷ್ಮಿ ಪಿಯು ಕಾಲೇಜಿನ ಮೈದಾನದಲ್ಲಿ ಸೋಮವಾರ ನಡೆದ ಕೊಟ್ಟಂಗಡ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಂಡುವಂಡ ತಂಡ ಜಯಗಳಿಸಿ ಪ್ರಶಸ್ತಿ ಪಡೆದುಕೊಂಡಿತು.
ಟಾಸ್ ಗೆದ್ದು ಮೊದಲು ಬ್ಯಾಂಟಿಂಗ್ ಆಯ್ದುಕೊಂಡ ಮಂಡುವಂಡ ತಂಡ ನಿಗದಿತ 12 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನಟ್ಟಿದ ಅಣ್ಣಳಮಾಡ ತಂಡ 7 ವಿಕೆಟ್ ಕಳೆದುಕೊಂಡು ಕೇವಲ 78ನ ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಅಣ್ಣಳಮಾಡ ತಂಡ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. 62 ರನ್ ಗಳಿಸಿದ ಮಂಡುವಂಡ ತಂಡದ ದರ್ಶನ್ ಪಂದ್ಯ ಪುರುಷ ಹಾಗೂ ಸರಣಿ ಪುರುಷೋತ್ತಮ ಪ್ರಶಸ್ತಿ
ಗಳಿಸಿದರು.
ಮೂರನೇ ಸ್ಥಾನಕ್ಕೆ ನಡೆದ ಪಂದ್ಯದಲ್ಲಿ ತಂಬುಕುತ್ತೀರ ತಂಡವನ್ನು ಚೆಕ್ಕೇರ ತಂಡ 8 ವಿಕೆಟ್ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಂಟಿಂಗ್ ಆಯ್ದುಕೊಂಡ ತಂಬುಕುತ್ತೀರ ತಂಡ ನಿಗದಿತ 10 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನು ಹತ್ತಿದ ಚೆಕ್ಕೇರ ತಂಡ 6.5 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 82 ರನ್ ಗಳಿಸಿತು. ತಂಬುಕುತ್ತೀರ ತಂಡದ ಶರಣ್ ಪಂದ್ಯಪುರಷ ಪ್ರಶಸ್ತಿ ಪಡೆದರು.
ಉತ್ತಮ ಬ್ಯಾಟ್ಸ್ಮನ್ ಪ್ರಶಸ್ತಿಯನ್ನು ಚೆಕ್ಕೇರ ತಂಡದ ಆಕರ್ಶ, ಉತ್ತಮ ಬೌಲರ್ ಪ್ರಶಸ್ತಿಯನ್ನು ಅಣ್ಣಳಮಾಡ ಅರುಣ್, ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ತಂಬುಕುತ್ತೀರ ಅರುಣ್ ಪಡೆದುಕೊಂಡರು.
ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ ಬಿದ್ದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪೆಮ್ಮಂಡ ಪೊನ್ನಪ್ಪ, ವಿಜಯಲಕ್ಷ್ಮಿ ಪಿಯು ಕಾಲೇಜಿನ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಕೊಟ್ಟಂಗಡ ರಾಜಾ ಸುಬ್ಬಯ್ಯ, ದರ್ಶನ್, ಕಾರ್ಯದರ್ಶಿ ಪ್ರಕಾಶ್ ಇದ್ದರು. ಕೊಟ್ಟಂಗಡ ಕುಟುಂಬದ ಅಧ್ಯಕ್ಷ ಮುದ್ದಪ್ಪ ಅಧ್ಯಕ್ಷತೆ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.