ಕುಶಾಲನಗರ: ಪಟ್ಟಣದ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘ 2024-25ರ ಸಾಲಿನಲ್ಲಿ ₹2.02 ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಹೇಳಿದರು.
ಸಂಘದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ವಿಸ್ತರಿಸುವ ಚಿಂತನೆ ಹೊಂದಲಾಗಿದೆ ಎಂದರು.
‘ಈ ಸಾಲಿನಲ್ಲಿ ₹402.69 ಕೋಟಿ ವಾರ್ಷಿಕ ವ್ಯವಹಾರ ನಡೆಸಿದೆ. ಸಂಘವು ಕಳೆದ 21 ವರ್ಷಗಳಿಂದಲೂ ಸತತ ಲಾಭದಲ್ಲಿ ಮುನ್ನಡೆಯುತ್ತಿದ್ದು, ಈ ಬಾರಿಯು ಲಾಭವನ್ನು ಹೆಚ್ಚಿಸಿಕೊಂಡಿದೆ. ಸದಸ್ಯರಿಗೆ ಈ ಬಾರಿಯೂ ಶೇ 25ರಷ್ಟು ಲಾಭಾಂಶ ನೀಡುತ್ತಿದ್ದೇವೆ. ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಆ.23ರಂದು ಬೆಳಿಗ್ಗೆ 11ಗಂಟೆಗೆ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಕರೆಯಲಾಗಿದೆ’ ಎಂದು ಹೇಳಿದರು.
‘ಸಂಘದ ಸದಸ್ಯರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಶೈಕ್ಷಣಿಕ ಸಾಲವನ್ನು ಪ್ರಾರಂಭಿಸಿದೆ. ಸಂಘದ ಸಾಲಗಾರ ಸದಸ್ಯರ ಅನುಕೂಲಕ್ಕಾಗಿ ಸಂಘದಿಂದ ಸದಸ್ಯರಿಗೆ ನೀಡುತ್ತಿರುವ ಎಲ್ಲಾ ರೀತಿಯ ಸಾಲಗಳ ಮೇಲಿನ ಬಡ್ಡಿದರವನ್ನು ಶೇ .50 ಕಡಿಮೆ ಮಾಡಲಾಗಿದೆ. ಸಂಘವು ವನಸಿರಿಯಂತಹ ಸಾಮಾಜಿಕ ಕಾರ್ಯಕ್ರಮವನ್ನು ನಡೆಸುತ್ತಿದ್ದಿದೆ. ಮುಂಬರುವ ಬೆಳ್ಳಿ ಮಹೋತ್ಸವದ ಸವಿ ನೆನಪಿಗಾಗಿ ಸೂಕ್ತ ಸ್ಮಾರಕ ಭವನವನ್ನು ನಿರ್ಮಾಣ ಮಾಡಿ, ಬೆಳ್ಳಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಿದ್ದೇವೆ’ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಸೇರಿದಂತೆ ನಿರ್ದೇಶಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.