ಕುಶಾಲನಗರ: ಪ್ರಕೃತಿ ವಿಕೋಪದಿಂದ ಸಂಭವಿಸುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಮೀಪದ ಕೂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸ್ವಯಂ ಸೇವಕರ ಸಭೆ ನಡೆಯಿತು.
ಪ್ರಕೃತಿ ವಿಕೋಪದಂಥ ತುರ್ತು ಸಂದರ್ಭಗಳಲ್ಲಿ ಸಂಘ –ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಸ್ವಯಂ ಸೇವಕರು ಸೇರಿದಂತೆ ಸಾರ್ವಜನಿಕರು ಇಲಾಖೆಯೊಂದಿಗೆ ನೋಂದಾಯಿಸಿಕೊಂಡು, ನಮ್ಮೊಂದಿಗೆ ಕೈಜೋಡಿಸುವ ಮೂಲಕ ಅನಾಹುತ ತಡೆಯಲು ಸಹಕರಿಸಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ್ ಮನವಿ ಮಾಡಿದರು.
‘ಮೇ, ಜೂನ್ನಲ್ಲಿ ಸಾಕಷ್ಟು ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಈ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದ್ದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ, ಅಪಾಯಕಾರಿ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸುವ ಸಂಬಂಧ ಎಸ್ಪಿ ಸೂಚನೆಯಂತೆ ಸಭೆ ನಡೆಸಲಾಗುತ್ತಿದೆ’ ಎಂದರು.
‘ತಮ್ಮ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವನೀಯ ಪ್ರದೇಶಗಳ ಬಗ್ಗೆ ಮುಂಚಿತವಾಗಿ ಮಾಹಿತಿ ತಿಳಿಸಬೇಕು’ ಎಂದು ತಿಳಿಸಿದರು.
‘ದುಬಾರೆ ರ್ಯಾಫ್ಟಿಂಗ್ ಗೈಡ್ಸ್, ಈಜು ತಜ್ಞರು, ಜೆಸಿಬಿ ಮಾಲೀಕರು, ಜೀಪ್ ಮಾಲೀಕರು ಹಾಗೂ ಟ್ರಾಕ್ಟರ್ ಮಾಲೀಕರು ಇಲಾಖೆಯಲ್ಲಿ ಹೆಸರನ್ನು ನೊಂದಾಯಿಸಿಕೊಂಡು ಅನಾಹುತ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡಬೇಕು’ ಎಂದು ಹೇಳಿದರು.
ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್, ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ, ವಿವಿಧ ಸಂಘಟನೆಗಳ ಮುಖಂಡರಾದ ಮಹಮ್ಮದ್, ರಫೀಕ್, ಶಾಫಿ, ಖಾಲಂದರ್, ಕೆ.ಎಸ್.ಶಿವಕುಮಾರ್, ದುಬಾರೆ ಚಂಗಪ್ಪ, ಜೆಸಿಬಿ, ಜೀಪ್ ಮಾಲೀಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.