ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಎನ್ಒಸಿ ನೀಡುವ ಅಧಿಕಾರವನ್ನು ತಾಂತ್ರಿಕ ಸಮಿತಿಗೆ ನೀಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.
‘ಎನ್ಒಸಿ ನೀಡುವ ಅಧಿಕಾರವನ್ನು ತಾಂತ್ರಿಕ ಸಮಿತಿಗೆ ನೀಡುವುದು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ವಿರುದ್ಧ. ಭೂ ಪರಿವರ್ತನೆ ಮಾಫಿಯಾ ಹುಟ್ಟಿಕೊಳ್ಳಲು ಕಾರಣವಾಗಿದೆ’ ಎಂದು ಕೊಡಗು ವನ್ಯಜೀವಿ ಸೊಸೈಟಿಯ ಮಾಜಿ ಅಧ್ಯಕ್ಷ ಕರ್ನಲ್ ಸಿ.ಪಿ. ಮುತ್ತಣ್ಣ ಅರ್ಜಿಯಲ್ಲಿ ಆರೋಪಿಸಿದ್ದಾರೆ.
‘ಕೊಡಗು ಜಿಲ್ಲೆಯ ಆರ್ಥಿಕ ಸ್ಥಿತಿ ಪ್ರವಾಸೋದ್ಯಮವನ್ನು ಅವಲಂಭಿಸುವ ಮುನ್ಸೂಚನೆಗಳು ಕಾಣಿಸುತ್ತಿವೆ. ಹವಾಮಾನ ವೈಪರಿತ್ಯ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಫಿ ದರದಲ್ಲಿನ ಏರಿಳಿತದ ಪ್ರಭಾವವೂ ಇದರ ಮೇಲೆ ಬೀರುತ್ತಿದೆ. ಸ್ಥಳೀಯರು ತೋಟಗಳನ್ನು ಮಾರಾಟ ಮಾಡಿ ನಗರಕ್ಕೆ ಹೋಗುತ್ತಿದ್ದರೆ, ಖರೀದಿಸುತ್ತಿರುವವರು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸುತ್ತಿದ್ದಾರೆ. ರೆಸಾರ್ಟ್ಗಳು ಹೆಚ್ಚಿನ ಸಂಖ್ಯೆಯಲ್ಲಿ ತಲೆ ಎತ್ತುತ್ತಿವೆ’ ಎಂದು ಅರ್ಜಿದಾರರು ದೂರಿದ್ದಾರೆ.
‘ತಾಂತ್ರಿಕ ಸಮಿತಿ ನೀಡುವ ಎನ್ಒಸಿಗಳನ್ನು ಆಧರಿಸಿ ಕೃಷಿಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದರೆ, ಅದು ನೈಸರ್ಗಿಕ ವಿಕೋಪ ಸೃಷ್ಟಿಸುತ್ತಿದೆ. ಇದು ಕಳೆದ ಒಂದೆರಡು ವರ್ಷಗಳಲ್ಲಿ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದೆ’ ಎಂದು ಆರೋಪಿಸಿದರು.
‘ತಾಂತ್ರಿಕ ಸಮಿತಿ ನೀಡುವ ಎನ್ಒಸಿ ಒಂದನ್ನೇ ಆಧರಿಸಿ ಕೃಷಿ ಭೂಮಿಯನ್ನು ಅನ್ಯ ಉದ್ದೇಶಕ್ಕೆ ಪರಿವರ್ತಿಸಲು ಆಗುವುದಿಲ್ಲ’ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ತಾಂತ್ರಿಕ ಸಮಿತಿ ಅಧ್ಯಕ್ಷರೂ ಆಗಿರುವ ಕೊಡಗು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.