ADVERTISEMENT

ತಲಕಾವೇರಿ ಪುಣ್ಯಕ್ಷೇತ್ರವಾಗಿಯೇ ಉಳಿಯಲಿ: ಕೊಡವ ಸಮಾಜ

ಬೆಟ್ಟ ಕುಸಿದ ಸ್ಥಳಕ್ಕೆ ಕೊಡವ ಸಮಾಜಗಳ ಒಕ್ಕೂಟದ ಪದಾಧಿಕಾರಿಗಳ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 13:03 IST
Last Updated 19 ಆಗಸ್ಟ್ 2020, 13:03 IST
ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳಕ್ಕೆ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು
ತಲಕಾವೇರಿಯಲ್ಲಿ ಬೆಟ್ಟ ಕುಸಿದ ಸ್ಥಳಕ್ಕೆ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು   

ಮಡಿಕೇರಿ: ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದು ಅನಾಹುತ ಸಂಭವಿಸಿದ್ದು ಆ ಸ್ಥಳಕ್ಕೆ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ದಿನಗಳಲ್ಲಿ ಈ ರೀತಿಯ ಅನಾಹುತಗಳು ಸಂಭವಿಸಬಾರದೆಂದು ಪ್ರಾರ್ಥಿಸಿ ಒಕ್ಕೂಟದ ಪದಾಧಿಕಾರಿಗಳು ಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಬೆಟ್ಟ ಕುಸಿತದಿಂದ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ ಅವರ ನೇತೃತ್ವದಲ್ಲಿ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ಸಂದರ್ಭ ನಾರಾಯಣ ಆಚಾರ್ ಅವರ ಪುತ್ರಿಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ADVERTISEMENT

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು, 2018ರಿಂದ ನಿರಂತರವಾಗಿ ಕೊಡಗಿನಲ್ಲಿ ಸಂಭವಿಸುತ್ತಿರುವ ಭೂ ಕುಸಿತದಿಂದ ಸಾರ್ವಜನಿಕ ಆಸ್ತಿ-ಪಾಸ್ತಿ, ಕೃಷಿ ಹಾನಿಯಾಗಿದೆ. ಸಾವು– ನೋವುಗಳು ಕೂಡ ಸಂಭವಿಸಿದ್ದು, ಜಿಲ್ಲೆಯ ಜನ ಕಳೆದ ಮೂರು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಕೊಡಗಿಗೆ ಪ್ರವಾಸೋದ್ಯಮ, ರೈಲುಮಾರ್ಗ, ಚತುಷ್ಪಥ ಇಲ್ಲವೇ ಆರು ಲೇನ್ ರಸ್ತೆಯ ಅಗತ್ಯವಿಲ್ಲ. ಬದಲಾಗಿ ಕೊಡಗಿನ ಮುಖ್ಯ ಸಮಸ್ಯೆಗಳಾದ ರೈತರು ಬೆಳೆಯುವ ಕಾಫಿ, ಭತ್ತ ಕರಿ ಮೆಣಸು, ಅಡಿಕೆ, ಏಲಕ್ಕಿ ಮತ್ತಿತರ ಬೆಳೆಗಳಿಗೆ ಬೆಂಬಲ ಬೆಲೆ, ರಸಗೊಬ್ಬರಕ್ಕೆ ಸಹಾಯಧನ ದೊರೆಯಬೇಕು. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಮಾಡಿ ಸರ್ವಋತುಗಳಿಗೆ ಹೊಂದುವಂತಹ ಗುಣಮಟ್ಟದ ರಸ್ತೆ ನಿರ್ಮಾಣವಾಗಬೇಕು. ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡಗಳ ದುರಸ್ತಿ, ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ರೋಗಿಗಳಿಗೆ ಉತ್ತಮ ಚಿಕಿತ್ಸೆ, ವೃದ್ಧರಿಗೆ ಮಾಸಿಕ ವೇತನ, ವಿಧವಾ ವೇತನ, ಬಡವರಿಗೆ ವಾಸದ ಮನೆ, ದಿನದ 24 ಗಂಟೆ ತಡೆರಹಿತ ವಿದ್ಯುತ್‌ ಅನ್ನು ನೀಡಬೇಕೆಂದು ಒತ್ತಾಯಿಸಿದರು.

ಕೊಡವರ ಕುಲದೇವಿ ಕಾವೇರಿಯ ಸಂಕ್ರಮಣದ ದಿನ ಕಾವೇರಿ ಮಾತೆಯ ಕಣಿ ಪೂಜೆ, ಹುಟ್ಟಿದ ಮಕ್ಕಳ ಮೊದಲ ತಲೆ ಮುಡಿ ನೀಡುವುದು, ನವವಿವಾಹಿತ ದಂಪತಿಗಳು ಕಾವೇರಿ ತೀರ್ಥ ಸ್ನಾನ ಮಾಡುವುದು, ಮರಣಾ ನಂತರ ಪಿಂಡ ಪ್ರದಾನ ಮಾಡುವುದು ಎಲ್ಲವೂ ಕೊಡವರು ತಲಕಾವೇರಿ ಕ್ಷೇತ್ರದೊಂದಿಗೆ ಹೊಂದಿರುವ ಭಾವನಾತ್ಮಕ ಮತ್ತು ಧಾರ್ಮಿಕ ನಂಬಿಕೆಯಾಗಿದೆ. ಕಾವೇರಿ ನದಿಯಾಗಿ ಹರಿಯುವ ಮೊದಲೇ ಕೊಡವರು ಕೊಡಗಿನಲ್ಲಿ ನೆಲೆಸಿದ್ದರು ಎನ್ನುವುದಕ್ಕೆ ಅಗಸ್ತ್ಯ ಮುನಿಗಳಿಂದ ಬೇರ್ಪಟ್ಟ ಮಾತೆ ಕಾವೇರಿಯನ್ನು ಬಲಮುರಿಯಲ್ಲಿ ಕೊಡವ ನಾರಿಯರು ತಡೆದಿರುವುದೇ ಸಾಕ್ಷಿಯಾಗಿದೆ ಎಂದು ವಿವರಿಸಿದರು.

ಕೋವಿಡ್ ವೈರಸ್ ಹರಡದಂತೆ ಹಗಲಿರುಳು ದುಡಿಯುತ್ತಿರುವ ವಾರಿಯರ್ಸ್‌ಗಳಿಗೆ ಇದೇ ಸಂದರ್ಭ ಅಭಿನಂದನೆ ಸಲ್ಲಿಸಿದರು. ಸರ್ಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಸಲಹೆ ನೀಡಿದರು.

ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ವಾಂಚೀರ ವಿಠಲ್ ನಾಣಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚಟ್ಟೊಳಂಡ ಮುನು ಮುತ್ತಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಮಕ್ಕಂದೂರು ಕೊಡವ ಸಮಾಜದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಚೇರಂಬಾಣೆ ಕೊಡವ ಸಮಾಜದ ಅಧ್ಯಕ್ಷ ಬಾಚಿರಾಣಿಯಂಡ ದಿನೇಶ್ ಗಣಪತಿ, ಚೇಯಂಡಣೆ ಕೊಡವ ಸಮಾಜದ ಅಧ್ಯಕ್ಷ ಮುಂಡ್ಯೂಳಂಡ ಬಿದ್ದಪ್ಪ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ನೆರವಂಡ ಅನುಪ್ ಉತ್ತಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಜಯ ದೇವಯ್ಯ, ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಸಂಘದ ಅಧ್ಯಕ್ಷ ಕನ್ನಂಡ ಕವಿತ ಬೊಳ್ಳಪ್ಪ ಪ್ರಮುಖರಾದ ಬೊಳ್ಳಜಿರ ಬಿ. ಅಯ್ಯಪ್ಪ, ಚೆಪ್ಪುಡಿರ ರಾಕೇಶ್ ದೇವಯ್ಯ, ಕೋಟೆರ ರಘು ಸೇರಿದಂತೆ ಎಲ್ಲಾ ಕೊಡವ ಸಮಾಜಗಳ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು.

‘ತಲಕಾವೇರಿ ಪುಣ್ಯಕ್ಷೇತ್ರವಾಗಿಯೇ ಉಳಿಯಲಿ...’
ತಲಕಾವೇರಿ ಕ್ಷೇತ್ರ ಪುಣ್ಯ ತೀರ್ಥಕ್ಷೇತ್ರವಾಗಿ ಉಳಿಯಬೇಕೆ ಹೊರತು ಪ್ರವಾಸಿ ತಾಣವಾಗಬಾರದು. ಪ್ರವಾಸಿಗಳ ಮೋಜು ಮಸ್ತಿಗೆ ಅವಕಾಶ ನೀಡದೆ, ಭಕ್ತಾಧಿಗಳ ದಿವ್ಯ ತೀರ್ಥ ಕ್ಷೇತ್ರವಾಗಬೇಕು. ಅಲ್ಲದೆ ಜಾತ್ರಾ ಮಹೋತ್ಸವದ ಸಂದರ್ಭ ಸ್ಥಳೀಯರಿಗೆ (ಕೊಡಗಿನ ಮೂಲ ನಿವಾಸಿಗಳಿಗೆ) ಹೆಚ್ಚಿನ ಆದ್ಯತೆ ನೀಡುವಂತಾಗಬೇಕು. ರಾಜಕೀಯ ರಹಿತವಾಗಿ ಜಾತಿ, ಮತ, ಧರ್ಮ, ಬೇಧವನ್ನು ಮೆಟ್ಟಿನಿಂತು, ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಮನವಿ ಮಾಡಿದ ವಿಷ್ಣು ಕಾರ್ಯಪ್ಪ, ಕ್ಷೇತ್ರದ ಬಗ್ಗೆ ಆಕ್ಷೇಪ– ಅಪಸ್ವರಗಳು ಸರಿಯಲ್ಲ ಎಂದು ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣುಕಾರ್ಯಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.