ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ವಿರಾಜಪೇಟೆ: ತಾಯಿಯನ್ನು ಕೊಲೆಗೈದ ಆರೋಪ ಸಾಬೀತಾದ ಕಾರಣ ಪುತ್ರನಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ನಿವಾಸಿ ಎಂ.ಕೆ. ದೇವಯ್ಯ (53) ಶಿಕ್ಷೆಗೆ ಗುರಿಯಾದ ಅಪರಾಧಿ.
ಸಮೀಪದ ಕೊಳ್ತೋಡು ಬೈಗೋಡು ಗ್ರಾಮದ ಎಂ.ಬಿ.ಕಾರ್ಯಪ್ಪ ಅವರ ಪತ್ನಿ ಕಾಮವ್ವ (83) ಅವರ ಮೃತದೇಹ 2020ರ ಡಿಸೆಂಬರ್ 3ರಂದು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಅವರ ಕಿರಿಯ ಪುತ್ರ ದೇವಯ್ಯ ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಸಿಪಿಐ ಶ್ರೀಧರ್ ಕಾಮವ್ವ ಪುತ್ರ ದೇವಯ್ಯ ಅವರೇ ಕೊಲೆ ಮಾಡಿದ್ದರು ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೇವಯ್ಯಗೆ ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ನಟರಾಜು ತೀರ್ಪು ನೀಡಿದ್ದು, ಸರ್ಕಾರಿ ಅಭಿಯೋಜಕ ಯಾಸೀನ್ ಅಹಮ್ಮದ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.