ಕುಶಾಲನಗರ: ‘ಕೊಡಗು ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗಲಿದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ವಿವಿಧ ಪಕ್ಷಗಳ ಹೆಚ್ಚಿನ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸ್ವಾಗತಾರ್ಹ. ಇದರಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು, ಮುಖಂಡರು ಪಕ್ಷದಿಂದ ಹೊರಹೋಗಲು ಅವಕಾಶ ನೀಡುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಸಂಘಟಿತ ಪ್ರಯತ್ನ ನಡೆಸಬೇಕಾಗಿದೆ’ ಎಂದರು.
‘ಜಿಲ್ಲೆಗೆ ರೈಲು ಮಾರ್ಗ ತರುವ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಅಗತ್ಯವಿದೆ. ಜಿಲ್ಲೆಗೆ ಈಗಾಗಲೇ ಇಬ್ಬರು ಶಾಸಕರ ಮೂಲಕ ₹ 500 ಕೋಟಿಗಳಷ್ಟು ಅನುದಾನ ಒದಗಿ ಬಂದಿದೆ’ ಎಂದು ತಿಳಿಸಿದರು.
ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ‘ಸಮಸ್ಯೆಗಳಿದ್ದಲ್ಲಿ ಪಕ್ಷದೊಳಗಡೆ ಅದನ್ನು ಬಗೆಹರಿಸುವ ಪ್ರಯತ್ನ ಮಾಡಬೇಕಿದೆ. ಮುಕ್ತ ಮನಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಸ್ಥಾನಮಾನಗಳು ಅರಸಿ ಬರಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನೆ, ಮನೆಗೆ ತಿಳಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರ ಸಹಕಾರ ಅಗತ್ಯ’ ಎಂದರು.
ಕೊಡಗು- ಮೈಸೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಲಕ್ಷ್ಮಣ್ ಗೌಡ ಮಾತನಾಡಿ, ‘ಪಕ್ಷಕ್ಕಾಗಿ ದುಡಿದ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಅಧಿಕಾರಕ್ಕೆ ಬರಲಿದ್ದು ಇಡೀ ದೇಶ ಕಾಂಗ್ರೆಸ್ ಮಯವಾಗಲಿದೆ. ಕಾಂಗ್ರೆಸ್ ಪಕ್ಷದ ಬದ್ಧತೆ, ಸಿದ್ಧಾಂತಕ್ಕೆ ಮನಸೋತು ಬೃಹತ್ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರುತ್ತಿದ್ದಾರೆ’ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ನಟೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ವಿವಿಧ ಘಟಕಗಳ ಪದಾಧಿಕಾರಿಗಳಾದ ಶೇಖ್ ಖಲೀಮುಲ್ಲಾ, ಟಿ.ಪಿ.ಹಮೀದ್, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್ ಕುಮಾರ್, ಎಂ.ಕೆ.ದಿನೇಶ್, ಕೆ.ಕೆ.ಮಂಜುನಾಥ್ ಕುಮಾರ್, ಶಾಜಿ, ಪ್ರಕಾಶ್, ಗೋವಿಂದಪ್ಪ, ಶಿವಕುಮಾರ್ ಮತ್ತಿತರರು ಇದ್ದರು.
ಇದೇ ಸಂದರ್ಭ ಬಿಜೆಪಿ, ಜೆಡಿಎಸ್ ಮುಖಂಡರಾದ ವಿಕ್ರಂ, ಪುನೀತ್, ಸೆಲ್ವಕುಮಾರ್, ಅನಿಲ್ ನೇತೃತ್ವದ ಯುವಕರ ತಂಡ ಕಾಂಗ್ರೆಸ್ ಸೇರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.