ADVERTISEMENT

ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಿದ ಲೋಕಾಯುಕ್ತ

ಪರಿಹಾರ ಕೇಂದ್ರಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 18:11 IST
Last Updated 29 ಆಗಸ್ಟ್ 2018, 18:11 IST
ಮಡಿಕೇರಿಯ ಮೈತ್ರಿ ಭವನದಲ್ಲಿರುವ ಪರಿಹಾರ ಕೇಂದ್ರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಬುಧವಾರ ಭೇಟಿ ನೀಡಿದರು
ಮಡಿಕೇರಿಯ ಮೈತ್ರಿ ಭವನದಲ್ಲಿರುವ ಪರಿಹಾರ ಕೇಂದ್ರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಬುಧವಾರ ಭೇಟಿ ನೀಡಿದರು   

ಮಡಿಕೇರಿ: ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಮನೆ, ಜಮೀನು ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರೊಂದಿಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಬುಧವಾರ ಮಾತುಕತೆ ನಡೆಸಿದರು.

ನಗರದ ಮೈತ್ರಿ ಭವನದಲ್ಲಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಪುನವರ್ಸತಿ ಕಲ್ಪಿಸಲು ನೆರವು ನೀಡಲಾಗುವುದು ಎಂದು ಆತ್ಮಸ್ಥೈರ್ಯ ತುಂಬಿದರು.

ಈ ಸಂದರ್ಭ ಕೆಲವು ಪೋಷಕರ ಜತೆಗೆ ಮಾತನಾಡಿ, ‘ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು, ವಸತಿ ಶಾಲೆಗೆ ಸೇರ್ಪಡೆ ಮಾಡಲು ಆಸಕ್ತಿ ಹೊಂದಿದಲ್ಲಿ ಅಧಿಕಾರಿಗಳು ನೆರವಾಗಲಿದ್ದಾರೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸದಿರಿ’ ಎಂದು ಸಲಹೆ ಮಾಡಿದರು.

ADVERTISEMENT

ರಾಜ್ಯದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸಂತ್ರಸ್ತರ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಮುಂದೆ ಬಂದಿವೆ. ಇದನ್ನು ಬಳಸಿಕೊಳ್ಳುವಂತಾಗಬೇಕು, ಕಡ್ಡಾಯವಾಗಿ ವಸತಿ ಶಾಲೆಗೆ ಅಥವಾ ಹತ್ತಿರದ ವಿದ್ಯಾರ್ಥಿ ನಿಲಯಕ್ಕೆ ಸೇರ್ಪಡೆ ಮಾಡಬೇಕು ಎಂದು ಹೇಳಿದರು.

ನಿರಾಶ್ರಿತರಿಗೆ ಪರಿಹಾರ ಕೇಂದ್ರದಲ್ಲಿ ಕೈಗೊಂಡಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ವಿಶ್ವನಾಥ್ ಶೆಟ್ಟಿ, ಕೇಂದ್ರದಲ್ಲಿ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು ನಿರಾಶ್ರಿತ ಕುಟುಂಬಗಳಿಗೆ ಕೊಡಬೇಕು, ಮುಖ್ಯವಾಗಿ ಅಡುಗೆ ಅನಿಲ, ಆಹಾರ ಸಾಮಗ್ರಿಗಳು, ಬಟ್ಟೆ, ವೈದ್ಯಕೀಯ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.