
ಮಡಿಕೇರಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ ಯೋಜನೆಯಡಿ 92 ಅರ್ಜಿಗಳು ಇಲ್ಲಿ ಗುರುವಾರ ನಡೆದ ಪ್ರಾಯೋಜಕತ್ವ ಹಾಗೂ ಪೋಷಕತ್ವ ಅನುಮೋದನಾ ಸಮಿತಿ ಸಭೆಯಲ್ಲಿ ಸ್ವೀಕೃತಗೊಂಡವು. ಇದರೊಂದಿಗೆ ಈ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಮಕ್ಕಳ ಸಂಖ್ಯೆ 703ಕ್ಕೆ ತಲುಪಿತು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು, ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಎಂದು ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಸ್.ಹೊನ್ನೇಗೌಡ ಮಾತನಾಡಿ, ‘ ಪ್ರಾಯೋಜಕತ್ವ ಯೋಜನೆಯಡಿ ಒಟ್ಟು 102 ಅರ್ಜಿಗಳು ಸಲ್ಲಿಕೆಯಾಗಿದ್ದವು. ಆ ಪೈಕಿ 92 ಅರ್ಜಿಗಳನ್ನು ಈಗ ಮಂಡಿಸಲಾಗಿದೆ. ಈ ಯೋಜನೆಯಡಿ ₹ 4 ಸಾವಿರ ನೀಡಲಾಗುತ್ತಿದೆ’ ಎಂದು ಹೇಳಿದರು.
ಮಕ್ಕಳ ರಕ್ಷಣಾ ಅಧಿಕಾರಿ ಸಚಿನ್ ಸುವರ್ಣ ಮಾತನಾಡಿ, ‘ಉಪಕಾರ್ ಯೋಜನೆಯಡಿ ಮಾಸಿಕ ₹ 5 ಸಾವಿರವನ್ನು ಅರ್ಹರಿಗೆ ನೀಡಲಾಗುತ್ತಿದ್ದು, ಕನಿಷ್ಠ 3 ವರ್ಷದವರೆಗೆ ಮಕ್ಕಳ ಪಾಲನೆ ಸಂಬಂಧಪಟ್ಟ ಸಂಸ್ಥೆಯವರದಾಗಿರುತ್ತದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯಡಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಮಗುವಿಗೆ 18 ವರ್ಷ ತುಂಬುವವರೆಗೆ ಮಾಸಿಕ ₹ 3,500 ನೀಡಲಾಗುತ್ತಿದ್ದು, ಈ ಯೋಜನೆಯಡಿ ಇಬ್ಬರಿಗೆ ಸಹಾಯಧನ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅಂಬಿಕಾ, ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ನಾಗರತ್ನ ಭಾಗವಹಿಸಿದ್ದರು.
ನಂತರ, ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಜಿಲ್ಲಾಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ತಲುಪಿಸುವಂತೆ ನಿರ್ದೇಶನ ನೀಡಿದರು. ಈ ಸಂಬಂಧ ಇಬ್ಬರಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ, ತಾಲ್ಲೂಕು ಕಾರ್ಮಿಕ ಅಧಿಕಾರಿಗಳಾದ ಎಂ.ಎಂ.ಯತ್ನಟ್ಟಿ, ಶಶಿಧರ, ಎಂ.ಸಿ.ಮಾದಪ್ಪ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಜ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ್ ಇತರರು ಹಲವು ಮಾಹಿತಿ ನೀಡಿದರು.
‘ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ ವಿಶೇಷ ಪಾಲನೆ ಉಪಕಾರ್ ಹಾಗೂ ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯನ್ನು ಅರ್ಹರಿಗೆ ತಲುಪಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು. ಸರ್ಕಾರದ ಮಿಷನ್ ವಾತ್ಸಲ್ಯ ಮಾರ್ಗಸೂಚಿಯಂತೆ ಪ್ರಾಯೋಜಕತ್ವ ಯೋಜನೆ ಜಾರಿಗೊಳಿಸಿದ್ದು 18 ವರ್ಷದೊಳಗಿನ ಮಕ್ಕಳ ರಕ್ಷಣೆ ಪಾಲನೆ ಮತ್ತಿತರ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚಿಸಿದರು. ವಿಶೇಷ ಪಾಲನಾ ಯೋಜನೆಯಡಿ ಅರ್ಹರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. 18 ವರ್ಷದೊಳಗಿನ ಮಕ್ಕಳ ರಕ್ಷಣೆ ಪಾಲನೆ ಪೋಷಣೆ ಮತ್ತಿತರ ಸಂಬಂಧ ಅಗತ್ಯ ಕ್ರಮವಹಿಸುವಂತೆ ಅವರು ನಿರ್ದೇಶನ ನೀಡಿದರು. ಉಪಕಾರ್ ಯೋಜನೆಯಡಿ ಬಾಲ ನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ 2015 ರಡಿ ನೋಂದಾಯಿಸಲಾಗಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 18 ವರ್ಷ ಪೂರ್ಣಗೊಂಡು ಸಂಸ್ಥೆಯಿಂದ ಬಿಡುಗಡೆಯಾದ ಮಕ್ಕಳ ಮುಂದಿನ ಪುನರ್ ವಸತಿಗಾಗಿ ಹಾಗೂ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಅನುವಾಗುವಂತೆ ಆರ್ಥಿಕ ಸ್ವಾವಲಂಬನೆಗೆ ಉಪಕಾರ್ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅರಿವು ಮೂಡಿಸಬೇಕು. ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು. ಇಲ್ಲಿ ಗುರುವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಜಿಲ್ಲಾಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪತ್ತೆಯಾದ ಬಾಲ ಕಿಶೋರ ಕಾರ್ಮಿಕರಿಗೆ ಅರ್ಹತೆ ಅನುಸಾರ ಸರ್ಕಾರಿ ಬಾಲಮಂದಿರ ವಸತಿ ನಿಲಯಗಳಲ್ಲಿ ನೇರವಾಗಿ ದಾಖಲಿಸಲು ಕ್ರಮವಹಿಸಬೇಕು ಎಂದು ಸಲಹೆ ನೀಡಿದರು. ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಚಟುವಟಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆಯೂ ಸೂಚಿಸಿದರು. ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿ ಗ್ರಾಮ ಸಭೆಗಳಲ್ಲಿ ಬಾಲ ಕಿಶೋರ ಕಾರ್ಮಿಕರ ರಕ್ಷಣೆ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.