ಮಡಿಕೇರಿ: ‘ಮಂಜಿನ ನಗರಿ’ ಮಡಿಕೇರಿಯಲ್ಲೂ ನವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ಕಟ್ಟಡಗಳು ವಿದ್ಯುತ್ ಬೆಳಕಿನಲ್ಲಿ ಕಂಗೊಳಿಸುತ್ತಿವೆ.
ಸಮೀಪದ ಪಂಪಿನಕೆರೆಯ ಬಳಿ ನಾಲ್ಕು ಶಕ್ತಿದೇವತೆಗಳಾದ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ಕುಂದೂರು ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮನ ಕರಗ ಹೊರಡಿಸುವ ಮೂಲಕ ನವರಾತ್ರಿ ಮಹೋತ್ಸವವು ವಿಧ್ಯುಕ್ತವಾಗಿ ಆರಂಭಗೊಂಡಿತು.
ಅ.8ರ ತನಕವೂ ಅರ್ಚಕರ ನೇತೃತ್ವದಲ್ಲಿ ಕರಗೋತ್ಸವವು ವಿವಿಧ ಬಡಾವಣೆಗಳಲ್ಲಿ ಸಂಚರಿಸಲಿದ್ದು, ಬಳಿಕ ಆಯಾ ದೇವಸ್ಥಾನಕ್ಕೆ ಕರಗಗಳು ಮರಳಲಿವೆ.
ಕಳೆದ ವರ್ಷ ಸಂಭವಿಸಿದ್ದ ಪ್ರಾಕೃತಿಕ ವಿಕೋಪದಿಂದ ದಸರಾ ಕಳೆಗುಂದಿತ್ತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಒಂದು ದಿನಕ್ಕೆ ಸೀಮಿತ ಮಾಡಲಾಗಿತ್ತು. ಈ ಬಾರಿ ನಗರ ದಸರಾ ಸಮಿತಿ ಆಶ್ರಯದಲ್ಲಿ 9 ದಿನವೂ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ. ಗಾಂಧಿ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದ್ದು ಸೋಮವಾರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಚಾಲನೆ ಸಿಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.