ಮಡಿಕೇರಿ: ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಿ, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ಸೋಮವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ನಾಯಕರೇ, ನಾಯಕನಾಗಿ ನಾಯಕನಂತೆ ಮಾತನಾಡಬೇಕು. ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ತಮ್ಮ-ತಮ್ಮ ಹಕ್ಕುಗಳನ್ನು ದೊರಕಿಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಡಾ.ಮಂತರ್ಗೌಡ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಎಫ್ಎಂಕೆಎಂಸಿ ಕಾಲೇಜಿನ ಪ್ರಾಧ್ಯಾಪಕ ಶ್ರೀಧರ್ ಮಾತನಾಡಿ, ‘ರಾಷ್ಟ್ರಮಟ್ಟದಿಂದ ಅಂತರರಾಷ್ಟ್ರೀಯ ಮಟ್ಟಕ್ಕೆ ನಮ್ಮ ಭಾರತ ಸಂವಿಧಾನ ತಲುಪಿದೆ’ ಎಂದರು.
ದಲಿತ ಸಂಘರ್ಷ ಸಮಿತಿ ಸಂಚಾಲಕ ದಿವಾಕರ್ ಮಾತನಾಡಿ, ‘ಅಂಬೇಡ್ಕರ್ ಭವನ ಸ್ಥಾಪನೆಗೆ ಸ್ಥಳಾವಕಾಶ ನೀಡಬೇಕು. ಈ ಮೊದಲು ಗುರುತಿಸಲಾದ ಸ್ಥಳವು ಸಮಿತಿಗೆ ಅಸಮಾಧಾನಕರವಾಗಿದ್ದು ಬೇರೆ ಸ್ಥಳವನ್ನು ನಿಗದಿಪಡಿಸಬೇಕು’ ಎಂದು ಮನವಿ ಮಾಡಿದರು.
ಈ.ರಾಜು ಮತ್ತು ತಂಡದವರು ಸಂವಿಧಾನ ಕುರಿತು ಹಾಡು ಹಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮದ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ನಗರಸಭೆ ಸದಸ್ಯ ಸತೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ವೀರಭದ್ರಯ್ಯ, ದೀಪಕ್, ರಾಜು, ಜನಾರ್ಧನ, ಜಗದೀಶ್, ಮೋಹನ್ ಮೌರ್ಯ, ದೀಪಕ್ ಪೊನ್ನಪ್ಪ, ಗಣೇಶ್, ತಹಶೀಲ್ದಾರ್ ಶ್ರೀಧರ್ ಭಾಗವಹಿಸಿದ್ದರು.
ಅಂಬೇಡ್ಕರ್ ವಸತಿ ಶಾಲೆ ಮಕ್ಕಳು ನಾಡಗೀತೆ ಹಾಡಿದರು.
ನಂತರ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಬಳಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಲು ಸ್ಥಳ ವೀಕ್ಷಿಸಲಾಯಿತು. ಇದಕ್ಕೂ ಮುನ್ನ ಗಾಂಧಿ ಮೈದಾನದಿಂದ ಸೈಕಲ್ ಜಾಥಾ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.