ADVERTISEMENT

ಮಡಿಕೇರಿ: ಸಾಹಸ ಕ್ರೀಡೋದ್ಯಾನ ಉದ್ಘಾಟನೆ

ಮಾರ್ಚ್ 18 ರಂದು ಗ್ರೇಟರ್ ರಾಜಾಸೀಟ್ ಉದ್ಯಾನವನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 5:28 IST
Last Updated 4 ಮಾರ್ಚ್ 2023, 5:28 IST
ಮಡಿಕೇರಿಯ ರಾಜಾಸೀಟ್ ಉದ್ಯಾನದ ಪಕ್ಕದಲ್ಲಿ ಮಕ್ಕಳ ಸಾಹಸ ಕ್ರೀಡೋದ್ಯಾನವನ್ನು ಶುಕ್ರವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ವೀಕ್ಷಿಸಿದರು
ಮಡಿಕೇರಿಯ ರಾಜಾಸೀಟ್ ಉದ್ಯಾನದ ಪಕ್ಕದಲ್ಲಿ ಮಕ್ಕಳ ಸಾಹಸ ಕ್ರೀಡೋದ್ಯಾನವನ್ನು ಶುಕ್ರವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ವೀಕ್ಷಿಸಿದರು   

ಮಡಿಕೇರಿ: ಇಲ್ಲಿನ ಪ್ರವಾಸಿ ತಾಣ ರಾಜಾಸೀಟ್ ಉದ್ಯಾನದ ಪಕ್ಕದಲ್ಲಿ ಮಕ್ಕಳ ಸಾಹಸ ಕ್ರೀಡೋದ್ಯಾನವು ಶುಕ್ರವಾರ ಉದ್ಘಾಟನೆಗೊಂಡಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಸಾಹಸ ಕ್ರೀಡಾತಾಣವನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ವೀಕ್ಷಿಸಿದರು.

ನಂತರ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ‘ರಾಜಸೀಟ್ ಉದ್ಯಾನವು ಆಕರ್ಷಣೀಯ ಸ್ಥಳವಾಗಿದೆ. ತೋಟಗಾರಿಕೆ ಮತ್ತು ಜಿಲ್ಲಾಡಳಿತದಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸಾಹಸ ಕ್ರೀಡೆಗೆ ಚಾಲನೆ ನೀಡಲಾಗಿದೆ. ಇದೊಂದು ವಿನೂತನ ಕಾರ್ಯಕ್ರಮ’ ಎಂದರು.

ADVERTISEMENT

ಮಾರ್ಚ್ 18ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರೇಟರ್ ರಾಜಸೀಟ್ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಾಹಸ ಕ್ರೀಡೆಗೆ ಸಂಬಂಧಿಸಿದಂತೆ ಕೊಡಗಿನ ಅನೇಕ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.

ಈಗಾಗಲೇ ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿದ್ದು, ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾಹಸ ಕ್ರೀಡೆಗಳಂತಹ ಅಭಿವೃದ್ಧಿ ಯೋಜನೆಗಳು ಪ್ರವಾಸಿಗರನ್ನು ಆಕರ್ಷಿಸಲಿವೆ ಎಂದು ಅವರು ತಿಳಿಸಿದರು.

ಬಳಿಕ ನಗರದ ರಾಜಸೀಟು ಉದ್ಯಾನವನದಲ್ಲಿ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರ್ಮಾಣವಾದ ಸಾಹಸ ಕ್ರೀಡಾ ವಿಭಾಗವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ನಾಯಕ, ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.