
ಮಡಿಕೇರಿ: ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ, ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ನಗರದಲ್ಲಿ ಮಂಗಳವಾರ ಅವರು ಬೀದಿ ನಾಯಿ ಹಾವಳಿ ನಿಯಂತ್ರಣ ಕುರಿತು ಸಭೆ ನಡೆಸಿ ಮಾತನಾಡಿದರು.
ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ನಾಯಿ ಅಥವಾ ಇತರೆ ಯಾವುದೇ ಪ್ರಾಣಿಗಳ ಕಡಿತದ ಪ್ರಕರಣಗಳು ಕಂಡು ಬಂದಾಗ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ತುರ್ತು ವೈದ್ಯಕೀಯ ನೆರವನ್ನು ಮತ್ತು ಪ್ರಥಮ ಚಿಕಿತ್ಸೆಯನ್ನು ಕಾಲಮಿತಿಯಲ್ಲಿ ಒದಗಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ , ‘2024ರಲ್ಲಿ ಜಿಲ್ಲೆಯಲ್ಲಿ 4,872 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದರು. 2025 ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ 4,217 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ’ ಎಂದು ಮಾಹಿತಿ ನೀಡಿದರು.
ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಮಾತನಾಡಿ, ‘ಬೀದಿನಾಯಿಗಳ ಹಾವಳಿ ನಿಯಂತ್ರಣ ಸಂಬಂಧ ಸ್ಥಳೀಯ ಸಂಸ್ಥೆಗಳ ಜೊತೆ ಕೈಜೋಡಿಸಿ, ಅಗತ್ಯ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಭೂ ದಾಖಲೆಗಳ ಉಪ ನಿರ್ದೇಶಕ ನಿರಂಜನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸೌಮ್ಯ ಪೊನ್ನಪ್ಪ, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ಗಿರೀಶ್, ನಾಚಪ್ಪ, ಗೋಪಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಭಾಗವಹಿಸಿದ್ದರು.
‘ಬೀದಿ ನಾಯಿಗಳಿಗಾಗಿ ಜಾಗ ಕೊಡಿ’
‘ಸುಪ್ರೀಂಕೋರ್ಟ್ ಈಚೆಗೆ ನೀಡಿದ ಆದೇಶದಂತೆ ಬೀದಿನಾಯಿಗಳನ್ನು ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಆಸ್ಪತ್ರೆಗಳು ಬಸ್ ನಿಲ್ದಾಣಗಳಿಂದ ಸ್ಥಳಾಂತರಿಸಬೇಕಿದೆ. ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಾದ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 1 ಎಕರೆ ಜಾಗ ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್ ಮಾತನಾಡಿ ‘ಬೀದಿ ನಾಯಿ ಸ್ಥಳಾಂತರಕ್ಕೆ ನಗರದ ಹೊರವಲಯದ ಸ್ವೀವರ್ಟ್ ಹಿಲ್ ಬಳಿ ನಗರಸಭೆಯ ಒಂದೂವರೆ ಎಕರೆ ಜಾಗ ಕಾಯ್ದಿರಿಸಲಾಗಿದೆ’ ಎಂದು ಮಾಹಿತಿ ನೀಡಿದರು. ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಸೋಮವಾರಪೇಟೆ ಕುಶಾಲನಗರ ಪೊನ್ನಂಪೇಟೆ ಗೋಣಿಕೊಪ್ಪ ವ್ಯಾಪ್ತಿಗಳಲ್ಲಿಯೂ ಜಾಗ ಕಾಯ್ದಿರಿಸಬೇಕು’ ಎಂದು ಸೂಚಿಸಿದರು. ಬೀದಿನಾಯಿಗಳ ಕಡಿತದಿಂದ ಉಂಟಾಗುವ ರೇಬಿಸ್ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ಬೀದಿ ನಾಯಿ ಹಾವಳಿ ನಿಯಂತ್ರಣ ಸಂಬಂಧ ಪಶುಪಾಲನೆ ಇಲಾಖೆಯವರು ಮೇಲ್ವಿಚಾರಣೆ ಮಾಡಬೇಕು. ಡಿಸೆಂಬರ್ ಒಳಗೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ನೀಡಿದ ಇತರೆ ಸೂಚನೆಗಳು
ಬೀದಿನಾಯಿಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಬೇಕು
ರಕ್ಷಣೆ ಮಾಡುವಲ್ಲಿ ಮುನ್ನೆಚ್ಚರಿಕೆ ವಹಿಸಬೇಕು
ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು
ಬೀದಿನಾಯಿಗಳ ಹಾವಳಿ ನಿಯಂತ್ರಣ ಮಾಡುವಲ್ಲಿ ಆಗಾಗ ಪರಿಶೀಲಿಸಬೇಕು
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ‘ರೇಬಿಸ್ ನಿರೋಧಕ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್’ ಚುಚ್ಚುಮದ್ದಿನ ದಾಸ್ತಾನು ಮಾಡಿಕೊಳ್ಳಬೇಕು
ನಾಯಿ ಕಡಿತಕ್ಕೆ ಒಳಗಾದವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಬೇಕು
ವಿಶೇಷ ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’
ನ. 10ರಂದು ‘ನಾಯಿಗಳಿಗಿಲ್ಲ ಸಂತಾನಶಕ್ತಿ ಹರಣ; ಸಂಖ್ಯೆಗೂ ಇಲ್ಲ ಕಡಿವಾಣ’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಬೀದಿ ನಾಯಿಗಳಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಬೀದಿ ನಾಯಿ ಕಡಿತ ಪ್ರಕರಣಗಳು ಏರಿಕೆಯಾಗಿರುವ ಕುರಿತು ಹಾಗೂ ಅವುಗಳ ಸಂಖ್ಯೆಯೂ ಹೆಚ್ಚಾಗಿರುವ ಕುರಿತು ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ಕೊಡಗು ಜಿಲ್ಲೆಯಲ್ಲಿ ನಾಯಿ ಕಡಿತಕ್ಕೆ ಒಳಗಾದವರು
2024; 4872
2025; 4217
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.