ಶನಿವಾರಸಂತೆ: ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ ಭಾನುವಾರ ನಡೆಸಲಾಯಿತು.
ಬೆಟ್ಟದ ತುದಿಗೆ ಹೋಗುವ ರಸ್ತೆ, ಬೆಟ್ಟದ ತುದಿಯಲ್ಲಿರುವ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಿತು.
ರೋಟರಿ ಕ್ಲಬ್ ಸದಸ್ಯರು ಮತ್ತು ಮಾಲಂಬಿ ಗ್ರಾಮಸ್ಥರು ಇದರಲ್ಲಿ ಪಾಲ್ಗೊಂಡು ದೇವಸ್ಥಾನಕ್ಕೆ ಹೋಗುವ ರಸ್ತೆಯುದ್ದಕ್ಕೂ ಪ್ರವಾಸಿಗರು ಬಿಸಾಡಿದ ತ್ಯಾಜ್ಯವನ್ನು ತೆಗೆದರು. ನಂತರ, ಬೆಟ್ಟದ ಮೇಲಿರುವ ದೇವಸ್ಥಾನದ ಸುತ್ತಮುತ್ತ ಹರಡಿದ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಿದರು.
ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಟಿ.ವಿ.ದಯಾನಂದ್ ಮಾತನಾಡಿ, ‘ರೋಟರಿ ಸಂಸ್ಥೆ ಸ್ವಚ್ಛತೆ, ಪರಿಸರ, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಮಾಜ ಸೇವಾ ಸಂಸ್ಥೆಯಾಗಿದೆ. ಈ ನಿಟ್ಟಿನಲ್ಲಿ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಈ ಕಾರ್ಯದಲ್ಲಿ ಗ್ರಾಮಸ್ಥರು ಸಹ ಸಹಕಾರ ನೀಡುತ್ತಿದ್ದು, ಮುಂದೆಯೂ ರೋಟರಿ ಸಂಸ್ಥೆಯ ಸಮಾಜ ಸೇವೆಯ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸ್ವಚ್ಛತಾ ಕಾರ್ಯದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಕಿರಣ್, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.