ADVERTISEMENT

ವಿರಾಜಪೇಟೆ | ನರೇಗಾ ಮರು ಜಾರಿಯವರೆಗೂ ಹೋರಾಟ: ಶಾಸಕ ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:19 IST
Last Updated 17 ಫೆಬ್ರುವರಿ 2026, 4:19 IST
ಜಿಲ್ಲೆಯ ವಿವಿಧೆಡೆಗಳಿಂದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು
ಜಿಲ್ಲೆಯ ವಿವಿಧೆಡೆಗಳಿಂದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು   

ವಿರಾಜಪೇಟೆ: ‘ಈ ಹಿಂದೆ ಇದ್ದ ನರೇಗಾ ಯೋಜನೆಯನ್ನು ಮರು ಜಾರಿಗೊಳಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಘೋಷಿಸಿದರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಾಮದ ಅಂಗವಾಗಿ ಪಟ್ಟಣದಲ್ಲಿ ಸೋಮವಾರ ನಡೆದ ಬೃಹತ್ ಪಾದಯಾತ್ರೆಯ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿನ ಹಿಂದುಳಿದ ವರ್ಗದವರಿಗೆ ಅನುಕೂಲವಾಗುತ್ತಿತ್ತು. ಇದೀಗ ಇದನ್ನು ಕೇಂದ್ರ ಸರ್ಕಾರ ಕಿತ್ತುಕೊಂಡು ಜನತೆಗೆ ಅನ್ಯಾಯ ಎಸಗಿದೆ ಆರೋಪಿಸಿದರು.

ADVERTISEMENT

ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ 90 ರಷ್ಟು ಅನುದಾನ ಬರುತ್ತಿತ್ತು. ಇದೀಗ ಅನುದಾನವಿಲ್ಲದಂತಾಗಿದೆ. ದೇಶದ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಕೇಂದ್ರದ ಬಿ.ಜೆ.ಪಿ ಸರ್ಕಾರ ಸಂವಿಧಾನವನ್ನು ಹಾಳುಗೆಡವಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ನಿರಂತರ ದ್ರೋಹ ಎಸಗುತ್ತಿದೆ ಎಂದು ದೂರಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಜನತೆಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ, ಈ ಹಿಂದೆ ಕಾಂಗ್ರೆಸ್ ಜಾರಿಗೊಳಿಸಿದ ಜನಪಯೋಗಿ ಯೋಜನೆಗಳನ್ನು ಇದೀಗ ಬಿಜೆಪಿ ಸರ್ಕಾರ ಹಾಳುಗೆಡವುತ್ತಿರುವುದು ದುರದೃಷ್ಟಕರ. ಇಂತಹ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡಬೇಕಿದೆ’ ಎಂದರು.

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ, ‘ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರನ್ನು ತೆಗೆಯುವ ಹೀನ ಕೆಲಸವನ್ನು ಬಿಜೆಪಿ ಮಾಡಿರುವುದು ಖಂಡನೀಯ’ ಎಂದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ‘ಕಾಂಗ್ರೆಸ್‌ ಏಳಿಗೆಯನ್ನು ಸಹಿಸದ ಬಿಜೆಪಿ ಕುತಂತ್ರದ ಕೆಲಸ ಮಾಡುತ್ತಿದೆ. ಯೋಜನೆಯ ಜಾರಿಗೆ ಹೋರಾಟ ಅಗತ್ಯ’ ಎಂದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪ್ರಚಾರ ಸಮಿತಿಯ ಟಿ.ಪಿ.ರಮೇಶ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಹಿಳಾ ಸಮಿತಿಯ ಜಿಲ್ಲಾ ಘಟಕದ ರೂಪ ದೇವಯ್ಯ, ಪಿ.ಜಿ ಅಯ್ಯಪ್ಪ, ಟಾಟು ಮೊಣ್ಣಪ್ಪ, ಕೆ.ಬಿ.ಶಾಂತಪ್ಪ, ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್ ಭಾಗವಹಿಸಿದ್ದರು.

ಪಟ್ಟಣದ ಕಾವೇರಿ ಕಾಲೇಜಿನ ಬಳಿಯಿಂದ ಪಂಜರಪೇಟೆ, ಸರ್ಕಾರಿ ಬಸ್ ನಿಲ್ದಾಣದ ರಸ್ತೆ, ದೊಡ್ಟಟ್ಟಿ ಚೌಕಿ, ಎಫ್.ಎಂ.ಸಿ ರಸ್ತೆ ಮೂಲಕ ಕಾರು ನಿಲ್ದಾಣದವರೆಗೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.