
ನಾಪೋಕ್ಲು: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ನಾಪೋಕ್ಲು ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಹೇಳಿದರು.
ನಾಪೋಕ್ಲು ಬಸ್ ನಿಲ್ದಾಣದಲ್ಲಿ ಬುಧವಾರ ಕೊಡಗು ಜಿಲ್ಲಾ ಪೊಲೀಸ್, ನಾಪೋಕ್ಲು ಪೊಲೀಸ್ ಠಾಣೆ ಹಾಗೂ ವಿವಿಧ ಶಾಲೆಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದ್ವಿಚಕ್ರ ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸಂಚಾರ ನಿಯಮಗಳನ್ನು ಅನುಸರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿ ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾಕಷ್ಟು ಸಾವು ನೋವುಗಳನ್ನು ತಪ್ಪಿಸಬಹುದು ಎಂದರು.
ಇಲ್ಲಿನ ಮಾರುಕಟ್ಟೆ ಸಮೀಪದಿಂದ ಪೇಟೆಯ ಮುಖ್ಯ ಬೀದಿಯಲ್ಲಿ ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ವಿವಿಧ ಘೋಷ ವಾಕ್ಯಗಳೊಂದಿಗೆ ವಿದ್ಯಾರ್ಥಿಗಳು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.