
ಕೊಡಗು ಜಿಲ್ಲಾಡಳಿತ ಹಾಗೂ ಹೊದ್ದೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ಹೊದ್ದೂರು ಗ್ರಾಮ ಪಂಚಾಯತಿಯ ಕಡಬಗೇರಿಯಲ್ಲಿ ನೂತನ ಬಡಾವಣೆಯನ್ನು ಶಾಸಕ ಡಾ ಮಂತರ್ ಗೌಡ ಉದ್ಘಾಟಿಸಿದರು
ನಾಪೋಕ್ಲು: ಫಲಾನುಭವಿಗಳಿಗೆ ಸರ್ಕಾರದ ಯೋಜನೆ ಅನುಸಾರ ಉಚಿತವಾಗಿ ನಿವೇಶನಗಳು ನೀಡಲಾಗಿದ್ದು, ಯಾರಿಗೂ ಹಣ ನೀಡಬಾರದು. ಅಧಿಕಾರಿಗಳು ಅಥವಾ ಯಾವುದೇ ವಕ್ತಿಯಾಗಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ನೇರವಾಗಿ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲಾಡಳಿತ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಕಡಬಗೇರಿಯಲ್ಲಿ ನಡೆದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 60 ಅರ್ಹ ಮತ್ತು ಆಯ್ದ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಲಾಗಿದೆ. ಸದ್ಯದಲ್ಲಿ ಮನೆ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಯಾರು ಕೂಡ ನಿವೇಶನವನ್ನು ಇತರರಿಗೆ ಮಾರಾಟ ಮಾಡಬಾರದು. ಮಾರಾಟ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಹಾನ್ ಸಾಧನೆಯನ್ನು ಈ ದೇಶದ ಜನತೆಗಾಗಿ ಮಾಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ಬಡಾವಣೆಗೆ ನಾಮಕರಣ ಮಾಡುವುದು ಒಳಿತು. ನೂತನ ಬಡಾವಣೆಗೆ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಎಂದು ನಾಮಕರಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನ ಹಾಗೂ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಸರ್ವಸದಸ್ಯರು, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಪರಿಶ್ರಮದಿಂದ ಉತ್ತಮ ಕೆಲಸ ಆಗಿದ್ದು ಶ್ರಮಿಸಿದ ಪ್ರತಿಯೊಬ್ಬರು ಅಭಿನಂದನಾರ್ಹರು ಎಂದು ಶ್ಲಾಘಿಸಿದರು.
ಇದಕ್ಕೂ ಮೊದಲು ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮದ ಚಿಟ್ಟಿಮಾಡ ಐನ್ ಮನೆ ರಸ್ತೆ ಕಾಮಗಾರಿಗೆ ₹5 ಲಕ್ಷ, ಮೇಕ್ ಮಣಿಯoಡ ಐನ್ ಮನೆ ರಸ್ತೆ ಕಾಮಗಾರಿಗೆ ₹5 ಲಕ್ಷ, ಕುಂಬಲ ದಾಳು ಕರ್ನಯ್ಯನ ಐನ್ ಮನೆ ರಸ್ತೆ ಕಾಮಗಾರಿಗೆ ₹5 ಲಕ್ಷ, ಕಣ್ವ ಬಲಮುರಿ ಮಾರಿಯಮ್ಮ ದೇವಸ್ಥಾನದ ಸಮೀಪ ನೂತನ ಸಮುದಾಯ ಭವನ ನಿರ್ಮಾಣಕ್ಕೆ ₹9.5. ಲಕ್ಷದ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ಹಂಸ ಮಾತನಾಡಿ, ಡಾ. ಮಂತರ್ ಗೌಡ ಶಾಸಕರಾಗಿ ಆಯ್ಕೆಗೊಂಡ ಎರಡೂವರೆ ವರ್ಷದಲ್ಲಿ ₹9 ಕೋಟಿಗೂ ಹೆಚ್ಚಿನ ಅನುದಾನವನ್ನು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ನೀಡಿದನ್ನು ಸ್ಮರಿಸಿದರು.
ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 300 ಹಕ್ಕು ಪತ್ರಗಳನ್ನು ಡಾ.ಮಂತರ್ ಗೌಡ ಅವರ ಅವಧಿಯಲ್ಲಿ ವಿತರಿಸಿದ್ದು, ಇದೊಂದು ಐತಿಹಾಸಿಕ ದಾಖಲೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಪಾಲೆಮಾಡು ಮೊಣ್ಣಪ್ಪ ಚುನಾವಣೆ ಸಂದರ್ಭದಲ್ಲಿ ಹಕ್ಕುಪತ್ರ ನೀಡುವ ಭರವಸೆಯನ್ನು ಡಾ. ಮಂತರ್ ಗೌಡ ಅವರ ಮುಂದೆ ಇಟ್ಟಿದ್ದು, ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ತಹಶಿಲ್ದಾರ್ ಶ್ರೀಧರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹನೀಫ್, ಹೊದ್ದೂರು ಗ್ರಾಮ ಪಂಚಾಯಿತಿ ಪಿಡಿಒ ವತ್ಸಲಾ ಕುಮಾರಿ, ಹೊಸ್ಕೇರಿ ಪಿಡಿಒ ಅಬ್ದುಲ್ಲಾ, ಪ್ರಮುಖರಾದ ತೆನ್ನಿರ ಮೈನಾ, ವಿ.ಜಿ.ಮೋಹನ್, ಅಪ್ರು ರವೀಂದ್ರ, ಕೊಳುಮಂಡ ರಫೀಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಚೌರೀರ ಅನಿತಾ, ಹಮೀದ್, ಕುಸುಮಾವತಿ, ಲಕ್ಷ್ಮೀ, ಅನುರಾಧಾ, ಕಡ್ಲೆರ ಟೈನಿ , ಮೊಯ್ದು, ಕೆ.ಆರ್.ಅನಿತಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.