ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು ಕೊಡಗು ಜಿಲ್ಲೆಯಲ್ಲಿ ಇದರ ಬಿಸಿ ತಟ್ಟುವ ಸಾಧ್ಯತೆ ಕಡಿಮೆಯಿದೆ.
ಜಿಲ್ಲೆಯ ಸಾರಿಗೆ ವ್ಯವಸ್ಥೆಯ ‘ಜೀವನಾಡಿ’ ಖಾಸಗಿ ಬಸ್ಗಳು ಎಂದಿನಂತೆಯೇ ಸಂಚರಿಸಲಿವೆ. ‘ಮುಷ್ಕರಕ್ಕೆ ಯಾವುದೇ ಬೆಂಬಲ ಇಲ್ಲ. ಸಾರ್ವಜನಿಕರಿಗೆ ತೊಂದರೆ ನೀಡಲು ಇಷ್ಟಪಡುವುದಿಲ್ಲ. ನೈತಿಕ ಬೆಂಬಲವಷ್ಟೇ’ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ತಿಳಿಸಿದ್ದಾರೆ.
ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನಲ್ಲೂ ಆಟೊರಿಕ್ಷಾ ಸಂಚಾರ ಎಂದಿನಂತೆಯೇ ಇರಲಿದೆ. ಆಟೊರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘವು ಬೆಂಬಲ ಘೋಷಿಸಿಲ್ಲ.
ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘವು ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕಾರಣ ವಾಣಿಜ್ಯ ವಹಿವಾಟು ನಿತ್ಯದಂತೆಯೇ ನಡೆಯಲಿದೆ. ಹೀಗಾಗಿ, ಜಿಲ್ಲೆಯಲ್ಲಿ ಮುಷ್ಕರದ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
ಕೆಎಸ್ಆರ್ಟಿಸಿ ಬಸ್ ಸೇವೆ ಇಲ್ಲ?: ಕೆಎಸ್ಆರ್ಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಮಾತ್ರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ಮಂಗಳವಾರ ಮಡಿಕೇರಿಯ ಪ್ರಯಾಣಿಕರು ದೂರದ ಊರುಗಳಾದ ಬೆಂಗಳೂರು, ಮೈಸೂರು, ಹಾಸನ, ಮಂಗಳೂರಿಗೆ ಹೊರಟರೆ ತೊಂದರೆಗೆ ಸಿಲುಕುವ ಸಾಧ್ಯತೆಯಿದೆ.
ಏನೇನು ಬೇಡಿಕೆ?: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಜಿಲ್ಲಾ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಜ. 8ರಂದು ಸಿದ್ದಾಪುರದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ. 9ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ.
‘1991ರಲ್ಲಿ ದೇಶದಲ್ಲಿ ಜಾರಿಗೆ ಬಂದ ಆರ್ಥಿಕ ನೀತಿಗಳನ್ನು ಇಂದಿನ ಕೇಂದ್ರ ಸರ್ಕಾರ ಬಹಳಷ್ಟು ವೇಗವಾಗಿ ಜಾರಿಗೆ ತರುತ್ತಿದೆ. ಇದರಿಂದ ದೇಶಕ್ಕೆ ಅನ್ನ ಕೊಡುವ ರೈತರು, ಸಂಪತ್ತು ಸೃಷ್ಟಿಸುವ ಕಾರ್ಮಿಕರು, ನೌಕರರು ಸಮಸ್ಯೆಗೆ ಸಿಲುಕಿದ್ದಾರೆ’ ಎಂದು ಕಾರ್ಮಿಕ ಸಂಘಟನೆ ಮುಖಂಡಪಿ.ಆರ್.ಭರತ್ ಹೇಳಿದರು.
‘ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರ ಸೇವೆ ಕಾಯಂ ಮಾಡಬೇಕು. ಕನಿಷ್ಠ ವೇತನ, ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.