ADVERTISEMENT

ಆತ್ಮವಿಶ್ವಾಸವೇ ಯಶಸ್ಸಿಗೆ ದಾರಿ: ನೂರುನ್ನಿಸಾ

ನಗರದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 14:37 IST
Last Updated 10 ಅಕ್ಟೋಬರ್ 2019, 14:37 IST
ಮಡಿಕೇರಿಯಲ್ಲಿ ಗುರುವಾರ ನಡೆದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಚಾಲನೆ ನೀಡಿದರು 
ಮಡಿಕೇರಿಯಲ್ಲಿ ಗುರುವಾರ ನಡೆದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಚಾಲನೆ ನೀಡಿದರು    

ಮಡಿಕೇರಿ: ಯೋಗ, ಧ್ಯಾನ, ಪ್ರಾರ್ಥನೆಯಿಂದ ಮಾನಸಿಕವಾಗಿ ನೆಮ್ಮದಿಯಾಗಿರಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಹೇಳಿದರು.

ಜಿಲ್ಲಾಡಳಿತ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘದ ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಕಡೆಯೂ ಗಮನಹರಿಸುವುದು ಅಗತ್ಯ ಎಂದು ಪ್ರತಿಪಾದಿಸಿದರು.

ADVERTISEMENT

ಬದುಕಿನಲ್ಲಿ ಪ್ರತಿಯೊಬ್ಬರಿಗೂ ಹಲವು ಸಮಸ್ಯೆಗಳು ಎದುರಾಗುತ್ತವೆ. ಸಮಸ್ಯೆಗಳು ಬರದಂತೆ ನೋಡಿಕೊಳ್ಳುವುದು ಅತೀಮುಖ್ಯ ಎಂದು ನೂರುನ್ನಿಸ ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವೈದ್ಯ ಡಾ.ರೂಪೇಶ್ ಗೋಪಾಲ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ಆತ್ಮಹತ್ಯೆಗೆ ತುತ್ತಾಗುತ್ತಾರೆ. ಆತ್ಮಹತ್ಯೆಗೆ ಹಲವು ಕಾರಣಗಳಿದ್ದು, ಅವುಗಳಲ್ಲಿ ಕೆಲಸದಲ್ಲಿ ಒತ್ತಡ, ಸಾಲ ಮಾಡಿಕೊಂಡಿರುವುದು, ಕೌಟುಂಬಿಕ ಕಲಹ, ಖಿನ್ನತೆ, ದೈಹಿಕ ಸಮಸ್ಯೆ ಮತ್ತಿತರವು ಕಾರಣವಾಗಿದೆ ಎಂದು ತಿಳಿಸಿದರು.

ಮಾನಸಿಕವಾಗಿ ನೆಮ್ಮದಿಯ ಜೀವನ ನಡೆಸುವಂತಾಗಲು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಅದರಂತೆ ನಡೆದುಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ವೈದ್ಯರ ಬಳಿ ಮಾಹಿತಿ ಪಡೆಯಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೈ.ಚಿತ್ರಾ ಮಾತನಾಡಿ, ಪುಸ್ತಕ ಓದು, ಬರಹ, ಸಂಗೀತ, ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಒತ್ತಡದಿಂದ ದೂರವಿರಬಹುದು ಎಂದು ಅಭಿಪ್ರಾಯಪಟ್ಟರು.

ಪ್ರಾಧ್ಯಾಪಕರಾದ ಕನ್ನಿಕಾ ಮಾತನಾಡಿ, ‘ಪ್ರತಿಯೊಬ್ಬರಲ್ಲೂ ಆತ್ಮವಿಶ್ವಾಸ ಇರಬೇಕು. ತಮ್ಮನ್ನು ತಾವು ಮೊದಲು ಗೌರವಿಸಿಕೊಳ್ಳಬೇಕು. ತಮ್ಮಲ್ಲಿರುವ ಸಾಮರ್ಥ್ಯ ಅರ್ಥಮಾಡಿಕೊಳ್ಳಬೇಕು ಅದನ್ನು ಬಿಟ್ಟು ಇನ್ನೊಬ್ಬರ ಬಗ್ಗೆ ಮಹತ್ವ ನೀಡುವುದು ಸರಿಯಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.’

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ಕೇವಲ ಬೆಂಗಳೂರು, ಧಾರವಾಡ ನಗರಗಳಿಗೆ ಸೀಮಿತವಾಗಿದ್ದ ಮಾನಸಿಕ ರೋಗಗಳ ಚಿಕಿತ್ಸೆ ಇಂದು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಘಟಕವು ಸ್ಥಾಪಿತವಾಗಿದ್ದು ಈ ತಂಡವು ಪ್ರತಿಯೊಂದು ಆರೋಗ್ಯ ಕೇಂದ್ರಗಳಿಗೆ ತೆರಳಿ ಆಪ್ತಸಮಾಲೋಚನೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಎಂ.ಶಿವಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಡೆವಿಲ್ ಲಿನೇಕರ್ ಕರ್ಕಡ, ಮಾನಸದಾರ ಸಂಸ್ಥೆಯ ವ್ಯವಸ್ಥಾಪಕ ವಿಶ್ವನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.