ವಿರಾಜಪೇಟೆ: ‘ಹತ್ತಾರು ಧರ್ಮಗಳು, ನೂರಾರು ಜಾತಿಗಳು, ಭಾಷೆಗಳಿರುವ ವಿಭಿನ್ನ ಸಂಸ್ಕೃತಿಯಿಂದ ಏಕತೆ ಹೊಂದಿರುವ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದುದಾಗಿದೆ’ ಎಂದು ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ಹೇಳಿದರು.
ತಾಲ್ಲೂಕು ಆಡಳಿತ ಪಟ್ಟಣದ ತಾಲ್ಲೂಕು ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
‘ದೇಶ ನನಗೆ ಏನು ಕೊಟ್ಟಿದೆ ಎಂಬುದಕ್ಕಿಂತಲೂ ನಾನು ದೇಶಕ್ಕೆ ಏನನ್ನು ಕೊಡುತ್ತಿದ್ದೇನೆ ಎಂಬುದು ಮುಖ್ಯ’ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬಿಳಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ವಾಣಿಜ್ಯ ಸಂಸ್ಥೆಯ ನಗರ ಘಟಕದ ಅಧ್ಯಕ್ಷ ಕಾಶಿ ಕಾವೇರಪ್ಪ, ಎಂ.ಶಂಕರಿ ಪೊನ್ನಪ್ಪ, ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ಚಿಕ್ಕಮಾದಯ್ಯ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ಸ್ತಬ್ಧ ಚಿತ್ರಗಳು ಗಮನಸೆಳೆದವು. ಪೊಲೀಸ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ ಹಾಗೂ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕಿ ಅಂಬುಜಾ ಸ್ವಾಗತಿಸಿದರು. ಚಾರ್ಲ್ಸ್ ಡಿಸೋಜಾ ನಿರೂಪಿಸಿದರು. ಎ.ವಿ. ಮಂಜುನಾಥ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.