ಮಡಿಕೇರಿ: ತಾಲ್ಲೂಕಿನ ಮದೆನಾಡು ಗ್ರಾಮದಲ್ಲಿ ಸಂತ್ರಸ್ತರಿಗೆ ನಿರ್ಮಿಸಲಾಗುತ್ತಿರುವ ಮನೆಗಳನ್ನು 77 ಕುಟುಂಬಗಳಿಗೆ ಗುರುವಾರ ಜಿಲ್ಲಾಡಳಿತ ಹಂಚಿಕೆ ಮಾಡಿದೆ.
ಪ್ರಕೃತಿ ವಿಕೋಪದಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದವು. ಕರ್ಣಂಗೇರಿ, ಮಾದಪುರ, ಮದೆನಾಡು ಗ್ರಾಮಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮೂಲಸೌಲಭ್ಯ ಕಲ್ಪಿಸಲು ಬಾಕಿಯಿದೆ. ಮದೆನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಅಲ್ಲಿಯೂ ಮೂಲ ಸೌಲಭ್ಯ ಕಲ್ಪಿಸುವ ಕೆಲಸ ಪ್ರಗತಿಯಲ್ಲಿದೆ.
ಮದೆನಾಡು, ಕಾಟಕೇರಿ, ಜೋಡುಪಾಲ, 2ನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸ್ಥಳೀಯ ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಒಟ್ಟು 128 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆಬೇಕೆಂದು ಮನವಿ ಮಾಡಿದ್ದರು. ಸ್ಥಳೀಯರಿಗೆ ಆದ್ಯತೆ ನೀಡಿ ಹಂಚಿಕೆ ಮಾಡಲಾಗಿದೆ. ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.