ವಿರಾಜಪೇಟೆ : ಸಮೀಪದ ತೋರದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಭೇಟಿಯ ಸಂದರ್ಭ ಸಂಸದ ಪ್ರತಾಪ್ ಸಿಂಹ ಅವರು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವ ತಂಡಗಳ ಮುಖ್ಯಸ್ಥರೊಂದಿಗೆ ಕಾರ್ಯಾಚರಣೆಯ ಮಾಹಿತಿ ಪಡೆದಕೊಂಡರು. ದುರಂತದಲ್ಲಿ ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡ ಪ್ರಭು ಕುಮಾರ್ ಭಟ್ ಮತ್ತು ಹರೀಶ್ ಅವರೊಂದಿಗೆ ಮಾತನಾಡಿ ಸಂತೈಸಿದರು.
ಸಂತ್ರಸ್ತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಪರಿಹಾರ ಹಾಗೂ ಅಗತ್ಯ ನೆರವು ದೊರಕಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭ ತಹಶೀಲ್ದಾರ್ ಪುರಂದರ ಅವರು ಪರಿಹಾರ ಕಾರ್ಯದ ಕುರಿತು ಮಾಹಿತಿ ನೀಡಿದರು.
ಕಂದಾಯ ಇಲಾಖೆಯ ಅಧಿಕಾರಿ ಪಳಂಗಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಎಂ.ಗಣೇಶ್, ಗ್ರಾಮ ಪಂಚಾಯಿತಿ ಪಿ.ಡಿ.ಒ ಪ್ರಮೋದ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಮುಂದುವರಿದ ಶೋಧ ಕಾರ್ಯ: ಸಮೀಪದ ತೋರ ಗ್ರಾಮದಲ್ಲಿ ಭೂಕುಸಿತದಿಂದ ನಾಪ್ತತೆಯಾದವರಿಗಾಗಿ ಶುಕ್ರವಾರವೂ ಶೋಧ ಕಾರ್ಯ ಮುಂದುವರಿದಿದ್ದು, ನಾಪತ್ತೆಯಾದ 4 ಮಂದಿ ಪತ್ತೆಯಾಗಿಲ್ಲ.
ಭೂಕುಸಿತದಲ್ಲಿ ಮೃತರಾದ 6 ಮಂದಿಯ ಶವ ಈವರೆಗೆ ದೊರೆತಿದ್ದು, ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಎನ್ಆರ್ಡಿಫ್, ಗರುಡ ತಂಡ ಹಾಗೂ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.