ಕುಶಾಲನಗರ: ನದಿ, ಪರಿಸರಗಳ ಸಂರಕ್ಷಣೆಯಿಂದ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಹುಣ್ಣಿಮೆ ಅಂಗವಾಗಿ ಕಾವೇರಿ ನದಿಗೆ 104 ನೇ ತಿಂಗಳ ಮಹಾ ಆರತಿ ಬೆಳಗುವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಪ್ರಕೃತಿ, ಪರಿಸರ, ನದಿ ಮೂಲಗಳನ್ನು ಆರಾಧಿಸುವ ಮೂಲಕ ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಇಂತಹ ಸಾಮಾಜಿಕ ಕಾರ್ಯಗಳನ್ನು ನಿರಂತರ ನಡೆಸುವ ಮೂಲಕ ಜನರಲ್ಲಿ ಜಾಗೃತಿಯ ಪ್ರಜ್ಞೆ ಮೂಡಿಸಬೇಕಾಗಿದೆ. ನದಿಯನ್ನು ಕಲುಷಿತಗೊಳಿಸುವ ಮನಸ್ಥಿತಿ ಬದಲಾಯಿಸುವುದರೊಂದಿಗೆ ಉತ್ತಮ ಪರಿಸರ ನಿರ್ಮಾಣ ಮಾಡುವಲ್ಲಿ ಜನರ ಪಾತ್ರ ಮಹತ್ವದ್ದಾಗಿದೆ ಎಂದರು.
ಪಟ್ಟಣ ಪಂಚಾಯತಿ ಸದಸ್ಯ ಬಿ. ಜಯವರ್ಧನ್ (ಕೇಶವ) ಮಾತನಾಡಿ, ಜಲಮೂಲಗಳ ರಕ್ಷಣೆಗಾಗಿ ಶ್ರಮಿಸುತ್ತಿರುವ ಕಾವೇರಿ ಸ್ವಚ್ಚತಾ ಆಂದೋಲನ ಸಮಿತಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪಂಚಾಯತಿ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಆರತಿ ಕಾರ್ಯಕ್ರಮದ ಅಂಗವಾಗಿ ಅರ್ಚಕ ಕೃಷ್ಣಮೂರ್ತಿ ಭಟ್ ಪೂಜಾ ವಿಧಿ ನೆರವೇರಿಸಿದರು. ಅಷ್ಟೋತ್ತರ, ಮಹಾಮಂಗಳಾರತಿ ಬಳಿಕ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.
ಈ ಸಂದರ್ಭ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ವಸಂತಕುಮಾರ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರ ಮೋಹನ್, ಉಪಾಧ್ಯಕ್ಷ ಡಿ.ಆರ್.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಮಂಡೇಪಂಡ ಬೋಸ್ ಮೊಣ್ಣಪ್ಪ, ಎಂ.ಬಿ.ಜೋಯಪ್ಪ, ಸೋಮಶೇಖರ್ ಶಾಸ್ತ್ರಿ, ಕಾವೇರಿ ನದಿ ಪ್ರವಾಹ ಸಂತ್ರಸ್ಥರ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ತೋರೇರ ಉದಯಕುಮಾರ್, ಮಹಿಳಾ ಭಜನಾ ಮಂಡಳಿ ಸದಸ್ಯರು, ಆರತಿ ಬಳಗದ ಪ್ರಮುಖರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.