ADVERTISEMENT

ಮಡಿಕೇರಿ: 2 ತಿಂಗಳಿನಲ್ಲಿ 2 ಬಾಲ್ಯವಿವಾಹಕ್ಕೆ ತಡೆ

ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 13:22 IST
Last Updated 19 ಜೂನ್ 2025, 13:22 IST
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಭೆಯಲ್ಲಿ ಸೂಚನೆಗಳನ್ನು ನೀಡಿದರು
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಭೆಯಲ್ಲಿ ಸೂಚನೆಗಳನ್ನು ನೀಡಿದರು   

ಮಡಿಕೇರಿ: ಕಳೆದೆರಡು ತಿಂಗಳುಗಳಲ್ಲಿ 3 ಬಾಲ್ಯವಿವಾಹ ಪ್ರಕರಣಗಳಲ್ಲಿ 2 ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಡೆಸಿದ ಮಿಷನ್ ವಾತ್ಸಲ್ಯ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಅಂಶ ಪ್ರಸ್ತಾಪವಾಯಿತು. ಜೊತೆಗೆ, ಮಕ್ಕಳ ಸಹಾಯವಾಣಿ 1098 ರಲ್ಲಿ 28 ದೂರುಗಳು ದಾಖಲಾಗಿವೆ ಎಂಬ ವಿಷಯವೂ ಪ್ರಸ್ತಾಪವಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಮಾತನಾಡಿ, ‘ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಎರಡು ಬಾಲ್ಯ ವಿವಾಹ ಪ್ರಕರಣ ತಡೆಯಲಾಗಿದೆ. ಉಳಿದಂತೆ, ಒಂದು ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು. ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ADVERTISEMENT

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಮಾತನಾಡಿ, ‘ಸರ್ಕಾರ 18 ವರ್ಷದೊಳಗಿನ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆಯನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ, ಜೊತೆಗೆ ಮಾಸಿಕ ₹ 2 ಸಾವಿರ ನೀಡಲಾಗುತ್ತಿದೆ. ಪ್ರಾಯೋಜಕತ್ವ ಕಾರ್ಯಕ್ರಮದಡಿ 18 ವರ್ಷದೊಳಗಿನ ಇಬ್ಬರು ಪೋಷಕರನ್ನು ಕಳೆದುಕೊಂಡಿರುವ ಮಕ್ಕಳು ಹಾಗೂ ಏಕಪೋಷಕರನ್ನು ಹೊಂದಿರುವ ಮಕ್ಕಳು ಹಾಗೂ ಸಜಾ ಕೈದಿಗಳ ಮಕ್ಕಳಿಗೆ ಮಾಸಿಕ ₹ 4 ಸಾವಿರ ಆರ್ಥಿಕ ಧನ ಸಹಾಯ ಒದಗಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಉಪಕಾರ್’ ಯೋಜನೆಯಡಿ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ದಾಖಲಾಗಿ ಕನಿಷ್ಠ 3 ವರ್ಷ ಸಂಸ್ಥೆಯಲ್ಲಿ ಪೋಷಣೆ ಹಾಗೂ ರಕ್ಷಣೆ ಪಡೆದು 18 ವರ್ಷ ಪೂರ್ಣಗೊಳಿಸಿ ಶಿಕ್ಷಣ ಹಾಗೂ ತರಬೇತಿ ಉದ್ದೇಶದಿಂದ ಸಂಸ್ಥೆಯಿಂದ ಬಿಡುಗಡೆಯಾಗುವ ಮಕ್ಕಳಿಗೆ ಮಾಸಿಕ ₹ 5 ಸಾವಿರ ಒದಗಿಸುವ ಯೋಜನೆಯೂ ಇದೆ ಎಂದರು.

ಮಕ್ಕಳಿಗೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಉಚಿತವಾಗಿ ಕರೆಮಾಡಿ ಮಾಹಿತಿ ಒದಗಿಸುವುದಕ್ಕಾಗಿ ಮಕ್ಕಳ ಸಹಾಯವಾಣಿ 1098 ಘಟಕವನ್ನು ಪ್ರಾರಂಭಿಸಲಾಗಿದ್ದು, 28 ದೂರುಗಳು ದಾಖಲಾಗಿವೆ. ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿಯು ಸಹ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯ ಹಾಡಿಗಳು ಲೈನ್‍ಮನೆಗಳು ಸೇರಿದಂತೆ ಗ್ರಾಮಮಟ್ಟದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಕಾಯ್ದೆ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.