ಗೋಣಿಕೊಪ್ಪಲು: ಮಾನವ– ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಇಲ್ಲಿಗೆ ಸಮೀಪದ ತಿತಿಮತಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.
ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅರಣ್ಯಾಧಿಕಾರಿಗಳ ವಿರುದ್ಧ ಹರಿಹಾಯ್ದರು.
ನಿತ್ಯ ಜನರು ವನ್ಯಜೀವಿಗಳ ದಾಳಿಯಿಂದ ಹೈರಣಾಗಿದ್ದಾರೆ. ಸಾಕುಪ್ರಾಣಿಗಳನ್ನು ನಿತ್ಯವೂ ಕಳೆದುಕೊಳ್ಳುತ್ತಿದ್ದಾರೆ. ಇವುಗಳನ್ನೆಲ್ಲ ತಡೆಗಟ್ಟಲು ಅರಣ್ಯ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಇಲ್ಲಿ ಅರಣ್ಯಾಧಿಕಾರಿಗಳು ಇಲ್ಲಿಗೆ ಬಂದು ಸಂಬಳ ತೆಗೆದುಕೊಂಡು ಹೋಗುವುದಕ್ಕಾಗಿ ಮಾತ್ರವೇ ಬಂದಿರುವುದಲ್ಲ. ಈ ಸಂಘರ್ಷ ತಪ್ಪಿಸಲು ನಿಮ್ಮ ಕಾಣಿಕೆ ಏನು ಎಂಬುದನ್ನು ಹೇಳಿ. ಎಷ್ಟು ಪ್ರಸ್ತಾವ ಕಳುಹಿಸಿದ್ದೀರಿ’ ಎಂದು ಪ್ರಶ್ನಿಸಿದರು.
ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ವನ್ಯಜೀವಿ- ಮಾನವ ಸಂಘರ್ಷ ಹಿಂದೆಂದಿಗಿಂತಲೂ ಗಂಭೀರ ಸ್ಥಿತಿಯನ್ನು ತಲುಪಿದ್ದು, ರೈತರು ಅಳಿವು-ಉಳಿವಿನ ಹಂತವನ್ನು ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ, ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.