ADVERTISEMENT

ಮಡಿಕೇರಿ: 8 ಜಿಲ್ಲೆಗಳ 320 ಮಕ್ಕಳಿಂದ ಮೊಳಗಿತು ದೇಶಭಕ್ತಿ ಗೀತೆಗಳು

ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮೈಸೂರು ವಿಭಾಗ ಮಟ್ಟದ ‘ಗಾನ ಸುಧೆ’

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 2:49 IST
Last Updated 24 ನವೆಂಬರ್ 2025, 2:49 IST
ಕಾರ್ಯಕ್ರಮವನ್ನು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಉದ್ಘಾಟಿಸಿದರು
ಕಾರ್ಯಕ್ರಮವನ್ನು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಉದ್ಘಾಟಿಸಿದರು   
ಸಮವಸ್ತ್ರಧಾರಿಗಳಾಗಿ ಬಂದಿದ್ದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು | ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದೆ ಪೊಲೀಸ್ ಇಲಾಖೆ

ಮಡಿಕೇರಿ: ಇಲ್ಲಿನ ಜೂನಿಯರ್ ಕಾಲೇಜು ಆವರಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ (ಪಿಎಂಶ್ರೀ) ಸಭಾಂಗಣದಲ್ಲಿ ಭಾನುವಾರ 8 ಜಿಲ್ಲೆಗಳ 320ಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿ ಹಾಡು ಹಾಡುವ ಮೂಲಕ ಗಮನ ಸೆಳೆದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ, ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಗೈಡ್ಸ್ ಭವನ, ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್,  ಕಬ್ಸ್-ಬುಲ್ ಬುಲ್ಸ್-ಸ್ಕೌಟ್ಸ್-ಗೈಡ್ಸ್-ರೋವರ್ಸ್-ರೇಂಜರ್ಸ್ ಮಕ್ಕಳ ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತೆಗಾಯನ ಸ್ಪರ್ಧೆ ‘ಗಾನ ಸುಧೆ’ಯಲ್ಲಿ  ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ 320 ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ಸಮವಸ್ತ್ರಧಾರಿಗಳಾಗಿದ್ದ ವಿದ್ಯಾರ್ಥಿಗಳು ಹಾಡಿದ ಸುಶ್ರಾವ್ಯವಾದ ಹಾಡುಗಳು ಪ್ರೇಕ್ಷಕರನ್ನು ಬಹುವಾಗಿ ಸೆಳೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ‘ಕೊಡಗಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತಿದೆ’ ಎಂದು ಶ್ಲಾಘಿಸಿದರು.

ADVERTISEMENT

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ‘ಒಟ್ಟು 8 ಜಿಲ್ಲೆಗಳ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ‘ಗಾನ ಸುಧೆ’ಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ’ ಎಂದರು.

ಈ ರೀತಿಯ ಕಾರ್ಯಕ್ರಮಗಳಿಂದ ಸಂಸ್ಕೃತಿಯ ವಿನಿಮಯವಾಗುತ್ತದೆ, ಪರಸ್ಪರ ವಿದ್ಯಾರ್ಥಿಗಳ ಪರಿಚಯವಾಗುತ್ತದೆ. ಭವಿಷ್ಯದ ಗೆಲುವಿಗಾಗಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಸೋಲೇ ಗೆಲುವಿನ ಮೆಟ್ಟಿಲಾಗಿದೆ, ಸೋಲು, ಗೆಲುವಿಗಿಂತ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಕರೆ ನೀಡಿದರು.

ಡಿವೈಎಸ್‌ಪಿ ಪೆಮ್ಮಂಡ ಎ.ಸೂರಜ್ ಮಾತನಾಡಿ, ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಐಕ್ಯತೆಯನ್ನು ಮೂಡಿಸುತ್ತದೆ ಮತ್ತು ಪೂರ್ವಜರ ದೇಶಭಕ್ತಿಯನ್ನು ನೆನಪಿಸುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಕೂಡ ಕಾರ್ಯಕ್ರಮಗಳಿಗೆ ಸಹಕಾರ ನೀಡಲಿದೆ. ಜಿಲ್ಲಾ ಪೊಲೀಸರ ಸಾಂಸ್ಕೃತಿಕ ವೇದಿಕೆಯು ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಹಾಡುಗಾರರಿದ್ದಾರೆ. ಇಲಾಖೆಯ ಕಲಾವಿದರು ಕಾರ್ಯಕ್ರಮ ನೀಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು.

ತೀರ್ಪುಗಾರರಾಗಿ ಕಲಾವಿದರಾದ ಶೋಭಾ ಸುಬ್ಬಯ್ಯ, ವೀಣಾ ಹೊಳ್ಳ, ಮಮತಾ ಶಾಸ್ತ್ರೀ, ಲಕ್ಷ್ಮೀ ಭಟ್, ಸುಮನಾ ರಾವ್ ಹಾಗೂ ಮೇಘನಾ ಭಟ್ ಕಾರ್ಯನಿರ್ವಹಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಪಾಜೆ ಅಧ್ಯಕ್ಷ ಎಂ.ಧನಂಜಯ, ಸ್ಕೌಟ್‌ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ರಾಜ್ಯ ಆಯುಕ್ತ (ಸ್ಕೌಟ್) ಬಿ.ಕೆ.ಬಸವರಾಜು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್.ಎಂ.ಜಗದೀಶ್, ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಪೊನ್ನಂಪೇಟೆ ಅಧ್ಯಕ್ಷ ಕಾಳಿಮಾಡ ಎಂ.ಮೋಟಯ್ಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ, ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್, ಕಾರ್ಯದರ್ಶಿ ಎಂ.ಎಂ.ವಸಂತಿ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಜಿಲ್ಲಾ ಸಹಾಯಕ ಆಯುಕ್ತ (ಸ್ಕೌಟ್) ಕೆ.ಬಿ.ಗಣೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಚ್.ಕೆ.ಭವಾನಿ, ಸ್ಕೌಟ್ಸ್, ಗೈಡ್ಸ್‌ನ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ಚಾಮರಾಜನಗರ ಜಿಲ್ಲೆಯ ಬುಲ್ ಬುಲ್ಸ್ ವಿಭಾಗದ ವಿದ್ಯಾರ್ಥಿಗಳು ಗೀತಾ ಗಾಯನ ಕಾರ್ಯ‌ಕ್ರಮವನ್ನು ಪ್ರಸ್ತುತಪಡಿಸಿದರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಪ್ರೇಕ್ಷಕರು ಸೇರಿದ್ದರು
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.