ಮಡಿಕೇರಿ: ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಾಗ ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಬಲಿಯಾದ ಪೊಲೀಸ್ ಹುತಾತ್ಮರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿವೈಎಸ್ಪಿ ದಿನೇಶ್ ಕುಮಾರ್, ಜಯ ಕುಮಾರ್, ಶೈಲೇಂದ್ರ, ಜಿಲ್ಲಾ ಶಸಸ್ತ್ರ ಪಡೆಯ ಎಸ್.ರಾಚಯ್ಯ, ಮಡಿಕೇರಿ ಗ್ರಾಮಾಂತರ ಠಾಣೆಯ ಸಿಪಿಐ ದಿವಾಕರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಮಾತನಾಡಿ, ‘ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ. ಪ್ರತಿ ವರ್ಷವು ಈ ದಿನವನ್ನು ಅತ್ಯಂತ ಗೌರವ ಪೂರ್ವಕವಾಗಿ ಆಚರಿಸಲಾಗುತ್ತದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಶೌರ್ಯದಿಂದ ಹೋರಾಡಿ ಹುತಾತ್ಮರಾಗಿದ್ದಾರೆ‘ ಎಂದರು.
ಕಳೆದ ವರ್ಷ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳ ವಿವರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಉಲ್ಲೇಖಿಸಿದರು.
ಅ.21, ಪೊಲೀಸರ ಶೌರ್ಯ, ಸಾಹಸವನ್ನು ಸ್ಮರಿಸುವ ದಿನವಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ದೇಶ ಹಾಗೂ ಸಮಾಜದ ರಕ್ಷಣೆ ಸಂದರ್ಭದಲ್ಲಿ ಒಟ್ಟು 264 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
ಜಿಲ್ಲಾ ಶಸಸ್ತ್ರ ಪಡೆಯ ಎಸ್.ರಾಚಯ್ಯ ಅವರ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಹುತಾತ್ಮರಿಗೆ ಗೌರವ ಅರ್ಪಿಸಲಾಯಿತು.
ಸಿದ್ದೇಶ್ ಅವರ ನೇತೃತ್ವದ ಪೊಲೀಸ್ ವಾದ್ಯ ತಂಡದವರು ರಾಷ್ಟ್ರಗೀತೆ ಹಾಡಿದರು. ಅಂಥೋಣಿ ಡಿಸೋಜ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.