ADVERTISEMENT

ಸಾಧನೆಗೆ ಪರಿಶ್ರಮವೇ ಮೆಟ್ಟಿಲು : ಹಾಕಿ ಪಟು ಸುನಿಲ್‌

ಪೊಲೀಸ್‌ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ಹಾಕಿ ಆಟಗಾರ ಸುನಿಲ್‌ ಆಚಾರ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 13:24 IST
Last Updated 18 ಡಿಸೆಂಬರ್ 2019, 13:24 IST
ಮಡಿಕೇರಿಯಲ್ಲಿ ಬುಧವಾರ ಪೊಲೀಸ್‌ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ಹಾಕಿ ಆಟಗಾರ ಎಸ್.ವಿ.ಸುನಿಲ್‌ ಆಚಾರ್ಯ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿದರು
ಮಡಿಕೇರಿಯಲ್ಲಿ ಬುಧವಾರ ಪೊಲೀಸ್‌ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ಹಾಕಿ ಆಟಗಾರ ಎಸ್.ವಿ.ಸುನಿಲ್‌ ಆಚಾರ್ಯ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿದರು   

ಮಡಿಕೇರಿ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ಹಾಕಿಪಟು ಎಸ್‌.ವಿ.ಸುನಿಲ್‌ ಆಚಾರ್ಯ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಶ್ರಮ ವಹಿಸಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಸುನಿಲ್‌ ಅಭಿಪ್ರಾಯಪಟ್ಟರು.

ಕ್ರೀಡೆ, ಕೃಷಿ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ, ಶ್ರದ್ಧೆ ಮತ್ತು ಪರಿಶ್ರಮದಿಂದ ತೊಡಗಿಸಿಕೊಂಡಲ್ಲಿ ಯಶಸ್ಸು ಗಳಿಸಬಹುದು ಎಂದು ಸಲಹೆ ಮಾಡಿದರು.

ADVERTISEMENT

ಪೊಲೀಸರು ದಿನದ 24 ಗಂಟೆಯೂ ಸಹ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುತ್ತಾರೆ. ಇವರ ಸೇವೆ ಶ್ಲಾಘನೀಯ. ಪೊಲೀಸರ ಕರ್ತವ್ಯ ನಿಷ್ಠೆ ಮತ್ತು ಸಮಯ ಪ್ರಜ್ಞೆ ಮೆಚ್ಚುವಂತಹದ್ದು. ದಿನನಿತ್ಯದ ಕರ್ತವ್ಯದ ಜೊತೆಗೆ ಬಿಡುವು ಮಾಡಿಕೊಂಡು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.

‘ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ, ದೇಶಕ್ಕೆ ಕೀರ್ತಿ ತರಬೇಕು ಎಂಬ ಉದ್ದೇಶವಿದೆ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ’ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಪೊಲೀಸರು ವೈಯಕ್ತಿಕ ಬದುಕು ಬದಿಗೊತ್ತಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಕಾನೂನು ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಾರೆ. ಪೊಲೀಸರ ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ, ಹಾಗೂ ಕಾರ್ಯ ವೈಖರಿ ಶ್ಲಾಘನೀಯ ಎಂದು ನುಡಿದರು.

ನಿವೃತ್ತ ಪೊಲೀಸ್ ಅಧಿಕಾರಿಗಳಾದ ಪೂಣಚ್ಚ, ರವಿರಾಜ್, ನಿವೃತ್ತ ಮೇಜರ್ ನಂಜಪ್ಪ ಹಾಗೂ ಕುಶಾಲಪ್ಪ, ನಿಂಗಪ್ಪ, ಲಯನ್ಸ್ ಸಂಸ್ಥೆಯ ವಲಯ ಅಧ್ಯಕ್ಷ ದಾಮೋದರ, ಧನಂಜಯ, ಡಿವೈಎಸ್‌ಪಿ ದಿನೇಶ್ ಕುಮಾರ್, ಜಯಕುಮಾರ್, ಮುರಳೀಧರ, ದಯಾನಂದ, ಮೇದಪ್ಪ, ಅನೂಪ್ ಮಾದಪ್ಪ, ರಾಚಯ್ಯ, ಮಹೇಶ್ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.