ADVERTISEMENT

ಕೊಡಗು: 3 ಸಾವಿರ ಮಂದಿಗೆ ನಿವೇಶನ, ಸಿದ್ಧತೆಗೆ ಪೊನ್ನಣ್ಣ ಸೂಚನೆ

ಅಧಿಕಾರಿಗಳ ವಿಳಂಬ ಧೋರಣೆಗೆ ಕಿಡಿಕಾರಿದ ಶಾಸಕ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 1:43 IST
Last Updated 22 ಫೆಬ್ರುವರಿ 2026, 1:43 IST
ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು
ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು   

ಮಡಿಕೇರಿ: ‘ಮಾರ್ಚ್ 27ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ನಿವೇಶನ‌ ಹಕ್ಕುಪತ್ರ ವಿತರಿಸಲಾಗುವುದು. ಹಾಗಾಗಿ, ಎಲ್ಲ ಅಧಿಕಾರಿಗಳೂ ಚುರುಕಿನಿಂದ ಕಾರ್ಯನಿರ್ವಹಿಸಿ, ಹಕ್ಕುಪತ್ರ ವಿತರಿಸಲು ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಬೇಕು’ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

'ಈ ಕಾರ್ಯವನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲೇ ಮಾಡಬೇಕಿತ್ತು. ಆದರೆ, ನಿವೇಶನ ಹಕ್ಕುಪತ್ರ ವಿತರಣೆಗೆ ವಿಳಂಬ ಆಗಿದೆ. ನಿವೇಶನ ರಹಿತರ ಫಲಾನುಭವಿಗಳ ಪಟ್ಟಿ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ‌ ಜತೆ ಹಲವು ಬಾರಿ ಚರ್ಚಿಸಲಾಗಿತ್ತು, ಆದರೆ ಇದುವರೆಗೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ’ ಎಂದು ಕಿಡಿಕಾರಿದರು. ಇರುವ ತಾಂತ್ರಿಕ ತೊಂದರೆಗಳನ್ನು ಒಂದು ವಾರದಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಸಭೆಗೆ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಅವರನ್ನೂ ಕರೆಸಲಾಗಿತ್ತು. ಅವರು ವಸತಿ ಇಲಾಖೆಯಲ್ಲಿ ಅನುಮೋದನೆಗೆ ಬಾಕಿ ಇರುವ ಹಲವು ಕಡತಗಳನ್ನು ಸ್ಥಳದಲ್ಲಿಯೇ ವಿವೇವಾರಿ ಮಾಡಿದರು.

ಈ ವೇಳೆ ಮಾತನಾಡಿದ ಎ.ಎಸ್.ಪೊನ್ನಣ್ಣ, ‘ಇದೇ ಬಜೆಟ್ ಅಧಿವೇಶನದ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯಿಂದ ಲೈನ್‌ಮನೆಗಳಲ್ಲಿ ವಾಸಿಸುವ ಸುಮಾರು 1,125 ಕುಟುಂಬಗಳಿಗೆ, ಹಾಗೆಯೇ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ, ಜತೆಗೆ ಸ್ಥಳೀಯ‌ ಸಂಸ್ಥೆ ವ್ಯಾಪ್ತಿ ಸೇರಿದಂತೆ ಒಟ್ಟು ಸುಮಾರು 3 ಸಾವಿರ ನಿವೇಶನ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

‘ಕಡು ಬಡವರ ಕುಟುಂಬಕ್ಕೆ ಆಧಾರ್ ಹಾಗೂ ಚುನಾವಣಾ ಗುರುತಿನ ಚೀಟಿ ಮಾಡಿಸಬೇಕು’ ಎಂದು ಹೇಳಿದರು.

ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಪೌರಕಾರ್ಮಿಕರಿಗೆ ನಿವೇಶನ‌ ಹಕ್ಕುಪತ್ರ ಹಾಗೂ ಮನೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು.

ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ ಅವರು ತಮ್ಮ ಹಂತದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ವಿವರಿಸಿದರು. ಗೋಣಿಕೊಪ್ಪಲುವಿನಲ್ಲಿ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ ಬಗ್ಗೆ‌ ಪಿಡಿಒ ಮಾಹಿತಿ ನೀಡಿದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜಗನ್ನಾಥ್, ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಭಾಗವಹಿಸಿದ್ದರು.

ನಿವೇಶನ ಹಕ್ಕುಪತ್ರ ಹಂಚಿಕೆ ಸಂಬಂಧಿಸಿದಂತೆ ಗಂಭೀರವಾಗಿ ಪರಿಗಣಿಸಿ ಕಾಲಮಿತಿಯಲ್ಲಿ ಪರಿಹರಿಸಲಾಗುವುದು
- ಎಸ್.ಜೆ.ಸೋಮಶೇಖರ್, ಜಿಲ್ಲಾಧಿಕಾರಿ.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಹಕ್ಕುಪತ್ರ ನೀಡಲು ಬಾಕಿ ಇರುವ ಸುಮಾರು 622 ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು.
- ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ.

ಎಲ್ಲೆಲ್ಲಿ ನಿವೇಶನ

ಸಮಗ್ರ ಗಿರಿಜನ ಯೋಜನಾ ಇಲಾಖೆ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಮಾತನಾಡಿ ‘ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ವ್ಯಾಪ್ತಿಯಲ್ಲಿ 116 ಕಳತ್ಮಾಡು ವ್ಯಾಪ್ತಿಯಲ್ಲಿ 127 ಪೊನ್ನಂಪೇಟೆ ತಾಲ್ಲೂಕಿನ ಬಾಳುಗೋಡು ಗ್ರಾಮ ವ್ಯಾಪ್ತಿಯಲ್ಲಿ 37 ಬಿರುನಾಣಿ ವ್ಯಾಪ್ತಿಯಲ್ಲಿ 621 ಹಾಗೂ ಕುರ್ಚಿ ಗ್ರಾಮ‌ ವ್ಯಾಪ್ತಿಯಲ್ಲಿ 224 ಒಟ್ಟು 1125 ಅರ್ಹ ಕುಟುಂಬಕ್ಕೆ ಒಟ್ಟು 38 ಎಕರೆ ಭೂಮಿಯಲ್ಲಿ ನಿವೇಶನ ಹಕ್ಕುಪತ್ರ ನೀಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ ‘ತಾಲ್ಲೂಕಿನಲ್ಲಿ ನಿವೇಶನ ರಹಿತ 528 ಅರ್ಜಿಗಳಲ್ಲಿ 460 ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ. ಉಳಿದವು ತಾಂತ್ರಿಕ ಕಾರಣದಿಂದ ಬಾಕಿ ಇದೆ’ ಎಂದರು. ಇದಕ್ಕೆ ಸ್ಪಂದಿಸಿದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮೋಹನ್ ರಾಜ್ ಅವರು ಸ್ಥಳದಲ್ಲಿಯೇ ಅನುಮೋದಿಸಿದರು.

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ ಮಾತನಾಡಿ ‘354 ಅರ್ಜಿಗಳಲ್ಲಿ 239 ಅರ್ಜಿಗಳಿಗೆ ಅನುಮೋದನೆ ದೊರೆತಿದೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ 370 ಗುರಿಯಲ್ಲಿ 231 ನಿವೇಶನ ಹಕ್ಕುಪತ್ರ ನೀಡಲು ಸಿದ್ಧವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.