
ಕುಶಾಲನಗರದ ನಿಂಗೆಗೌಡ ಬಡಾವಣೆಯಲ್ಲಿ ಕೈಗೊಳ್ಳಲಾದ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದು
ಕುಶಾಲನಗರ: ಪಟ್ಟಣದ ನಿಂಗೆಗೌಡ ಬಡಾವಣೆಯಲ್ಲಿ 15ನೇ ಹಣಕಾಸು ಯೋಜನೆಯಡಿ ₹6 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಎರಡನೇ ಹಂತದ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ ಅವರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡು ಉದ್ಘಾಟನೆಗೆ ನಿರಾಕರಿಸಿದ ಘಟನೆ ಭಾನುವಾರ ನಡೆಯಿತು.
ಶಾಸಕರು ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರೊಂದಿಗೆ ಭೇಟಿ ನೀಡಿ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ನಿಂಗೇಗೌಡ ಬಡಾವಣೆಯ ನಿವಾಸಿಗಳನ್ನು ಪ್ರಶ್ನಿಸಿದರು. ಗುಣಮಟ್ಟದ ರಸ್ತೆ ಮಾಡಿಸಿಕೊಳ್ಳುವುದು ನಿಮ್ಮ ಕರ್ತವ್ಯ. ನೀವು ಕಳಪೆ ಎಂದು ಗೊತ್ತಾದರೂ ಮೌನ ವಹಿಸುವುದು ಸರಿಯಲ್ಲ ಎಂದು ಹೇಳಿದರು.
ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೂ ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇದು ಕಳಪೆ, ಅಸಮರ್ಪಕ ಹಾಗೂ ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಾಕ್ಷಿಯಾಗುವ ಕಾಮಗಾರಿ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ, ಉದ್ಘಾಟನೆಗೆಂದು ಬಂದಿದ್ದರೂ ಉದ್ಘಾಟನೆ ಮಾಡದೆ ಹಿಂತಿರುಗಿದರು.