ADVERTISEMENT

ಜನಾಂದೋಲನಾ ವೇದಿಕೆಯಿಂದ 11ರಂದು ಮಡಿಕೇರಿಯಲ್ಲಿ ಸಮ್ಮೇಳನ

ಪ್ರಗತಿಪರ ಜನಾಂದೋಲನಾ ವೇದಿಕೆಯಿಂದ ಆಯೋಜನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 14:32 IST
Last Updated 2 ಜನವರಿ 2020, 14:32 IST

ಮಡಿಕೇರಿ: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ದಾಖಲೆ (ಎನ್‌ಆರ್‌ಸಿ) ವಿರೋಧಿಸಿ, ಪ್ರಗತಿಪರ ಜನಾಂದೋಲನಾ ವೇದಿಕೆಯಿಂದ ಜ.11ರಂದು ನಗರದ ಗಾಂಧಿ ಮೈದಾನದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ವಿ.ಪಿ.ಶಶಿಧರ್ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ ಕೇಂದ್ರ ಸರ್ಕಾರದ ಆರ್ಥಿಕ ವೈಫಲ್ಯ, ಉದ್ಯೋಗ ಸೃಷ್ಟಿ, ಆಡಳಿತ ದಬ್ಬಾಳಿಕೆ, ನಿರಂಕುಶ ಆಡಳಿತ, ಜನವಿರೋಧಿ ನೀತಿ ಕುರಿತು ಜನರಿಗೆ ಅರಿವು ಮೂಡಿಸಲು ಈ ಸಮ್ಮೇಳನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಬಿಜೆಪಿ ಹೊರತುಪಡಿಸಿ, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಜನಾಂದೋಲನ ರೂಪಿಸುವ ಸಲುವಾಗಿ ಜಿಲ್ಲೆಯ ಎಲ್ಲೆಡೆ ವಿವಿಧ ಸಂಘಟನೆ ಮತ್ತು ಪಕ್ಷಗಳ ಮುಖಂಡರು ಮನೆಮನೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ.ಗಣೇಶ್ ಮಾತನಾಡಿ, ಸಮ್ಮೇಳನ ಆಯೋಜನೆ ಹಿನ್ನೆಲೆಯಲ್ಲಿ ಜ.5ರಂದು ನಗರದ ವಾಣಿಜ್ಯ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ವಿವಿಧ ಪಕ್ಷಗಳ ಮುಖಂಡರ ಸಭೆ ಆಯೋಜಿಸಲಾಗಿದೆ. ಅಂದು ಜಾತ್ಯತೀತ ಮನಸ್ಸು ಉಳ್ಳವರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಅಬೂಬಕ್ಕರ್, ಸಿಪಿಐಎಂಎಲ್ ರಾಜ್ಯ ಸಮಿತಿ ಸದಸ್ಯ ಡಿ.ಎಸ್. ನಿರ್ವಾಣಪ್ಪ, ಸಿಪಿಐಎಂ ಮುಖಂಡ ಸುನಿಲ್, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಜಿಲ್ಲಾ ಕಾರ್ಯದರ್ಶಿ ಈ.ರಾ.ದುರ್ಗಾಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.