ಸೋಮವಾರಪೇಟೆ: ಕೋಲ್ಕತ್ತಾದ ಆರ್.ಜಿ ವೈದ್ಯಕೀಯ ಕಾಲೇಜಿನಲ್ಲಿ ಈಚೆಗೆ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ವಿವಿಧ ಮಹಿಳಾ ಸಂಘಟನೆಗಳಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಲಾಯಿತು. ನಂತರ ತಾಲ್ಲೂಕು ಕಚೇರಿಗೆ ಮೆರವಣಿಗೆಯ ಮೂಲಕ ಬರಲಾಯಿತು.
‘ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ಹಲ್ಲೆ ಹಾಗೂ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವುದು ಖಂಡನೀಯ. ಕೂಡಲೇ ಸ್ಥಳೀಯ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಮಹಿಳಯರ ಮೇಲಿನ ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸಲು ಕಠಿಣ ಕಾನೂನನ್ನು ಜಾರಿಗೆ ತರಬೇಕು’ ಎಂದು ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ಅಧ್ಯಕ್ಷೆ ಸಂಗೀತಾ ದಿನೇಶ್ ಹೇಳಿದರು.
ಮನವಿ ಪತ್ರವನ್ನು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಮುಖ್ಯಮಂತ್ರಿ ಹಾಗೂ ಗವರ್ನರ್ಗೆ ನೀಡಲಾಯಿತು.
ಹಾನಗಲ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ, ಪ್ರಗತಿಪರ ಮಹಿಳಾ ವೇದಿಕೆಯ ಅಧ್ಯಕ್ಷೆ ಪೂರ್ಣೀಮಾ ಗೋಪಾಲ್, ರಾಜ್ಯ ಲೇಖಕಿಯರ ಬಳಗದ ಶರ್ಮಿಳಾ ರಮೇಶ್, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್, ಅಕ್ಕನ ಬಳಗದ ಅಧ್ಯಕ್ಷೆ ಚಂದ್ರಿಕಾ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಸತೀಶ್, ಸ್ತ್ರೀ ಶಕ್ತಿ, ಅಕ್ಷಯ ಮಹಿಳಾ ಬ್ಯಾಂಕ್ ಲೋಕೇಶ್ವರಿ ಗೋಪಾಲ್, ಟೈಲರ್ಸ್ ಅಸೋಷಿಯೇಷನ್ ಅಧ್ಯಕ್ಷೆ ಇಂದಿರಾ ಮೊಣ್ಣಪ್ಪ, ಬಿಜೆಪಿ ಮಹಿಳಾ ಮೋರ್ಚಾ, ಜೆಸಿಐ, ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.