ಸುಂಟಿಕೊಪ್ಪ: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರ ಕೊರತೆಯ ಜೊತೆಗೆ ಹಗಲಿನ ವೇಳೆಯಲ್ಲೂ ನುರಿತ ವೈದ್ಯರು ಇಲ್ಲದೆ ಬಡ ರೋಗಿಗಳು ಚಿಕಿತ್ಸೆಗೆ ಖಾಸಗಿ ಕ್ಲಿನಿಕ್ಗೆ ಹೋಗುವ ಸ್ಥಿತಿಯಿದೆ.
‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಮಸ್ಯೆಯ ಬಗ್ಗೆ ಆರಿವಿದ್ದರೂ ಮೌನವಾಗಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳದಿದ್ದರೇ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಲಾಗುವುದು’ ಎಂದು ಸುಂಟಿಕೊಪ್ಪ ಎಸ್ಡಿಪಿಐ ಮುಖಂಡ ಕೆ.ಎ.ಲತೀಫ್ ಎಚ್ಚರಿಕೆ ನೀಡಿದ್ದಾರೆ.
‘ಇಲ್ಲಿನ ಆರೋಗ್ಯ ಕೇಂದ್ರಕ್ಕೆ 7 ಗ್ರಾಮ ಪಂಚಾಯಿತಿ ಒಳಗೊಂಡಿದ್ದು, ಅಂದಾಜು 20 ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಕೂಲಿ ಕಾರ್ಮಿಕರೇ ಈ ಭಾಗದಲ್ಲಿ ಅತೀ ಹೆಚ್ಚು ನೆಲೆಸಿದ್ದು, ತುರ್ತು ಚಿಕಿತ್ಸೆಗಳಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ. ದಿನಕ್ಕೆ ಕನಿಷ್ಠ 150 ಹೆಚ್ಚು ಮಂದಿ ಈ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಬರುತ್ತಾರೆ. ಕೇಂದ್ರದಲ್ಲಿ ನುರಿತ ವೈದ್ಯಾಧಿಕಾರಿಗಳು ಇಲ್ಲದಿದ್ದರೂ ನುರಿತ ಶುಶ್ರೂಷಕಿಯರಿಂದ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ದೊರೆಯುತ್ತಿದೆ. ಅಲ್ಲದೆ ತಿಂಗಳಿಗೆ ಕನಿಷ್ಠ 10 ಪ್ರಸೂತಿ ಕಾರ್ಯವು ನಡೆಯುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಿಂದಾಗ್ಗೆ ಅಧಿಕಾರಿಗಳು ಭೇಟಿ ನೀಡಿ ತೆರಳುತ್ತಿದ್ದರೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲು ಮುಂದಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯರೇ ಅತೀ ಹೆಚ್ಚು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಸರ್ಕಾರದ ಆದೇಶದಂತೆ ಮೂವರನ್ನು ನೇಮಕ ಮಾಡಲಾಗಿದೆ. ಆದರೆ ಇಲ್ಲಿನ ಪ್ರಸೂತಿ ಕಾರ್ಯಗಳ ಸಂದರ್ಭ ರೋಗಿಗಳು ಗಂಟೆಗಟ್ಟಲೇ ಕಾಯುವಂತಹ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳದೆ. ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನುರಿತ ಸಿಬ್ಬಂದಿಯನ್ನು ಏಕಾಏಕಿ ಮೂಲಸ್ಥಾನಕ್ಕೆ ವರ್ಗಾವಣೆಗೊಳಿಸುವ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಸ್ಯೆ ಉಲ್ಬಣಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಫೈರೋಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಹಿಂದಿನಿಂದಲೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಯ ಬಗ್ಗೆ ಸಾರ್ವಜನಿಕರು, ಸಂಘ ಸಂಸ್ಥೆಯವರು ಸಾಮಾನ್ಯವಾಗಿ ಪ್ರತಿಭಟನೆ ನಡೆಸಿದ್ದ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರಕ್ಕೆ ಬಂದು ಪರಿಹಾರ ಮಾಡುವ ಬಗ್ಗೆ ಭರವಸೆ ನೀಡಿ ತೆರಳುತ್ತಾರೆಯೇ ಹೊರತು ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನೂ ಕೂಡ ಕೈಗೊಂಡಿಲ್ಲ’ ಎಂದು ದೂರಿದ್ದಾರೆ.
‘ಶಾಸಕರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಈ ವಿಷಯದಲ್ಲಿ ಅಧಿಕಾರಿಗಳನ್ನು ಕುರಿತು ಸುಂಟಿಕೊಪ್ಪ ಆರೋಗ್ಯ ಕೇಂದ್ರದ ನಿಜವಾದ ಸಮಸ್ಯೆಗಳು, ಆಗಬೇಕಾಗಿರುವ ಮೂಲ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ. ಇಲ್ಲದಿದ್ದಲ್ಲಿ ಎಸ್ಡಿಪಿಐ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ’ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.