ಮಡಿಕೇರಿ: 'ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಪ್ರಕಟಣೆ ಖಂಡಿಸಿ ಮಡಿಕೇರಿಯಲ್ಲಿ ಡಿ.25ರಂದು ಸಂವಿಧಾನ ರಕ್ಷಣೆ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ಕೆ.ಬಿ.ರಾಜು ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ಅಂಬೇಡ್ಕರ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಅಂಬೇಡ್ಕರ್ ಅವರು ಎಲ್ಲಾ ಜಾತಿ ಧರ್ಮಕ್ಕೂ ಸಮಾನತೆಯನ್ನು ಸಾರುವ ಸಂವಿಧಾನವನ್ನು ರಚಿಸಿದ್ದಾರೆ. ಈ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಎತ್ತಿ ಹಿಡಿದಿದೆ. ಇಂತಹ ಪ್ರಜಾಪ್ರಭುತ್ವ ಹೊಂದಿದ ಸಂವಿಧಾನದ ಮೇಲೆ ಹಲವು ಕಿಡಿಗೇಡಿ ಮನುವಾದಿಗಳು, ಸಂವಿಧಾನ ಸರಿಯಿಲ್ಲ. ಸಂವಿಧಾನವನ್ನು ಬದಲಾವಣೆ ಮಾಡಬೇಕು ಎನ್ನುವ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಹೆಬ್ಬಾಲೆ, ಪ್ರಮುಖರಾದ ಎಂ.ಡಿ.ಲತಾ, ಕೆ.ಜೆ.ಸಾವಿತ್ರಮ್ಮ, ವೀಣಾ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.