ಮಡಿಕೇರಿ: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದೊಳಗಿನ ಕರಡಿಕಲ್ಲು ಅತ್ತೂರು ಕೊಲ್ಲಿ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟನೆ ನಡೆಸುತ್ತಿರುವ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳ ಪ್ರತಿಭಟನೆ ಶನಿವಾರವೂ ಮುಂದುವರಿಯಿತು.
‘ಬೆಂಗಳೂರು, ಎಚ್.ಡಿ.ಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಂದ ಬಂದಿದ್ದ ಹೋರಾಟಗಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಯಿತು. ಇಬ್ಬರಿಗೆ ಅರಣ್ಯ ಪ್ರವೇಶಕ್ಕೆ ಅನುಮತಿ ನೀಡಿದರು’ ಎಂದು ನಾಗರಹೊಳೆ ಆದಿವಾಸಿ ಜಮ್ಮಾಪಾಳೆ ಹಕ್ಕು ಸ್ಥಾಪನಾ ಸಮಿತಿ ಕಾರ್ಯದರ್ಶಿ ಶಿವು ‘ಪ್ರಜಾವಾಣಿ’ಗೆ ತಿಳಿಸಿದರು.
‘ಅರಣ್ಯದೊಳಗೆ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಅರಣ್ಯ ಇಲಾಖೆ ನಮ್ಮನ್ನು ಕಾಡಿನಿಂದ ಹೊರನಡೆಯಿರಿ ಎಂದು ನೋಟಿಸ್ ನೀಡಿದೆ. ಇದೆಲ್ಲವೂ ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸುವ ಪ್ರಯತ್ನ’ ಎಂದು ದೂರಿದರು.
‘ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ, ಕೇಂದ್ರೀಯ ಎಸ್.ಟಿ ಕಮಿಷನ್, ರಾಜ್ಯದ ಎಸ್ಸಿ, ಎಸ್ಟಿ ಕಮಿಷನ್ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು. ಪ್ರತಿಭಟನೆ ಮುಂದುವರಿಯಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.