ಕುಶಾಲನಗರ: ಪಟ್ಟಣದ ಗುಂಡೂರಾವ್ ಜಾತ್ರಾ ಮೈದಾನದಂಥ ವಿಶಾಲ ಜಾಗ ಸಾರ್ವಜನಿಕ ಬಳಕೆಗೆ ಅತ್ಯವಶ್ಯಕ. ಅಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಗೊಂಡಲ್ಲಿ ಸಭೆ, ಸಮಾರಂಭಗಳಿಗೆ ಖಂಡಿತ ಅಡ್ಡಿ ಎದುರಾಗಲಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ, ದೇವಾಲಯ ಸಮಿತಿ ನಿರ್ದೇಶಕ ವಿ.ಪಿ.ಶಶಿಧರ್ ಹೇಳಿದರು.
ಇಲ್ಲಿನ ಪುರಸಭೆ ವ್ಯಾಪ್ತಿಯ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನೂರು ಬೆಡ್ಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಿರುವ ಹಿನ್ನೆಲೆಯಲ್ಲಿ ಉಂಟಾಗಲಿರುವ ಸಾಧಕ ಬಾಧಕಗಳ ಕುರಿತು ಮಹಾಗಣಪತಿ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಭಾನುವಾರ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂಘಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
‘ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ತರಾತುರಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 4 ಎಕರೆ ಜಾಗ ಗುರುತಿಸಿರುವುದು ವಿಷಾದನೀಯ. ಪಟ್ಟಣದ ಇತಿಹಾಸ, ಪರಂಪರೆ ಕಣ್ಮರೆಯಾಗಬಾರದು. ಊರು ಬೆಳೆಯುತ್ತಿದೆ, ಪುರಸಭೆಯಿಂದ ನಗರ ಸಭೆಗೆ ಮೇಲ್ದರ್ಜೆಗೇರುವ ಅವಕಾಶವಿದೆ. ಕ್ಷೇತ್ರದ ಅಭಿವೃದ್ಧಿಗೆ ಅಪಾರ ಅನುದಾನ, ಯೋಜನೆಗಳನ್ನು ತರುತ್ತಿರುವ ಶಾಸಕರಿಗೆ ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ, ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಶಾಸಕರ ಗಮನ ಸೆಳೆಯಬೇಕಿದೆ’ ಎಂದರು.
ದೇವಾಲಯ ಸಮಿತಿ ನಿರ್ದೇಶಕ ಟಿ.ಆರ್.ಶರವಣಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಆಸ್ಪತ್ರೆ ನಿರ್ಮಾಣಗೊಂಡರೆ ಆ ಭಾಗದಲ್ಲಿ ಇದುವರೆಗೆ ನಡೆದುಕೊಂಡು ಬರುತ್ತಿರುವ ಜಾತ್ರೋತ್ಸವ, ಕ್ರೀಡಾಕೂಟ ಸೇರಿದಂತೆ ಇನ್ನಿತರೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಡ್ಡಿ ಉಂಟಾಗಲಿದೆ’ ಎಂದು ಹೇಳಿದರು.
‘ಆಸ್ಪತ್ರೆ ನಿರ್ಮಾಣಕ್ಕೆ ವಿರೋಧವಿಲ್ಲ, ಆದರೆ ಬದಲಿ ಜಾಗ ಗುರುತಿಸಬೇಕಿದೆ’ ಎಂಬುದು ಕೆಲವರ ಅಭಿಪ್ರಾಯವಾದರೆ, ಊರಿನೊಳಗೆ ಆಸ್ಪತ್ರೆ ನಿರ್ಮಾಣವಾದರೆ ಹೆಚ್ಚಿನ ಅನುಕೂಲ ಉಂಟಾಗಲಿದೆ’ ಎಂಬುದು ಹಲವರು ಅಭಿಪ್ರಾಯವಾಗಿತ್ತು. ಈ ಕುರಿತು ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಸಂಸ್ಥೆಗಳ ಪ್ರಮುಖರು ತಮ್ಮ ಅಭಿಪ್ರಾಯ ಮಂಡಿಸಿದರು.
ಆಸ್ಪತ್ರೆಗೆ ಇತರೆ ಸೂಕ್ತ ಜಾಗ ಗುರುತಿಸಬೇಕಿದೆ, ಶಾಸಕರ ನೇತೃತ್ವದಲ್ಲಿ ಸಭೆ ನಡೆದಲ್ಲಿ ಅನುಕೂಲವಾಗಲಿದೆ, ಪಾಳು ಬಿದ್ದಿರುವ, ಬಳಕೆಯಾಗದ ಲೋಕೋಪಯೋಗಿ, ಅರಣ್ಯ ಇಲಾಖೆ, ನೀರಾವರಿ ನಿಗಮಕ್ಕೆ ಒಳಪಡುವ ಜಾಗಗಳನ್ನು ಆಸ್ಪತ್ರೆ ನಿರ್ಮಾಣಕ್ಕೆ ಬಳಸಿಕೊಳ್ಳಿ ಎಂಬ ಅಭಿಪ್ರಾಯಗಳು ವ್ಯಕ್ತಗೊಂಡವು.
ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಗೌರವಾಧ್ಯಕ್ಷ ವಿ.ಎನ್.ವಸಂತಕುಮಾರ್, ಉಪಾಧ್ಯಕ್ಷ ಆರ್.ಬಾಬು, ಕಾರ್ಯದರ್ಶಿ ಬಿ.ಕೆ.ಮುತ್ತಣ್ಣ, ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.