ಮಡಿಕೇರಿ: ‘ಪ್ರಶ್ನೆ ಪತ್ರಿಕೆ ಸೋರಿಕೆ ಆಗಲು ಬಿಡುವುದಿಲ್ಲ. ಚೆನ್ನಾಗಿ ಓದಿದ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಯಲ್ಲಿ ಅನ್ಯಾಯ ಆಗುವುದಿಲ್ಲ. ನಿಶ್ಚಿಂತೆಯಿಂದ ಇರಿ’ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಯ ನೀಡಿದರು.
ನಾಪೋಕ್ಲು ಕೊಡವ ಸಮಾಜದಲ್ಲಿ ಶನಿವಾರ ನಡೆದ ಸಂವಾದದಲ್ಲಿ ವಿದ್ಯಾರ್ಥಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಮೂರು ದಿನ ಮೊದಲೇ ಶಾಲೆಯ ಮುಖ್ಯ ಶಿಕ್ಷಕರಿಗೆ ತಲುಪಿಸಲಾಗಿತ್ತು. ಒಬ್ಬರು ವಾಟ್ಸ್ಆ್ಯಪ್ನಲ್ಲಿ ಫೋಟೊ ತೆಗೆದು ವೈರಲ್ ಮಾಡಿದ್ದರು. ಆ ಶಿಕ್ಷಕರನ್ನು ಪತ್ತೆ ಹಚ್ಚಲಾಗಿದೆ. ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.
‘ಮುಖ್ಯಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಆಯಾ ಜಿಲ್ಲೆಯ ಖಜಾನೆಯಲ್ಲಿ ಇರುತ್ತವೆ. ಪರೀಕ್ಷೆ ಆರಂಭಕ್ಕೆ ಮೊದಲು ಕೇಂದ್ರಕ್ಕೆ ತಲುಪಿಸುತ್ತೇವೆ. ಜಿಲ್ಲಾಧಿಕಾರಿಗಳಿಗೆ ಉಸ್ತುವಾರಿ ನೀಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಆಗಲ್ಲ. ಆತಂಕ ಬೇಡ’ ಎಂದು ಹೇಳಿದರು.
‘ಮುಂದಿನ ವರ್ಷದಿಂದ ಶಿಕ್ಷಕರ ತರಬೇತಿ ಅವಧಿಯನ್ನು ಕಡಿತಗೊಳಿಸಿ, ಶಿಕ್ಷಕರನ್ನು ಪಾಠಕ್ಕೆ ಹೆಚ್ಚಾಗಿ ಬಳಸಿಕೊಳ್ಳುತ್ತೇವೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.