ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದಲ್ಲಿ ಹಣದ ಕೊರತೆ ಇದ್ದದ್ದು ನಿಜ. ಆದರೆ, ಈಗ ಕೊರತೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಹಾರಂಗಿ ಜಲಾಶಯಕ್ಕೆ ಬುಧವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಅವರು ಮುಖ್ಯಮಂತ್ರಿಯಾಗಿದ್ದಾಗ ಇದ್ದಂತೆ ಹಣದ ಕೊರತೆ ಈಗಲೂ ಇದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಆದರೆ, ಈಗ ಬೊಕ್ಕಸದಲ್ಲಿ ಹಣ ಇದೆ’ ಎಂದು ಹೇಳಿದರು.
‘ನ್ಯಾಯಾಧೀಶರಿಗೆ ಬೆದರಿಕೆ, ಒತ್ತಡ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ವೇಳೆ ಹಾಗೇನಾದರೂ ಇದ್ದರೆ ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಗೆ ದೂರು ಕೊಡಬಹುದು. ನಮ್ಮ ಸರ್ಕಾರ ಇದ್ದುದ್ದರಿಂದಲೇ ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನವಾಗಿದೆ. ಸಿದ್ದರಾಮಯ್ಯ ಸರ್ಕಾರ ಇದ್ದಿದ್ದರೆ ಎಲ್ಲವನ್ನೂ ಮುಚ್ಚಿ ಹಾಕುತ್ತಿದ್ದರು’ ಎಂದು ಆರೋಪಿಸಿದರು.
ಮಳೆ ಇನ್ನಷ್ಟು ಬೀಳುತ್ತಿರುವುದರಿಂದ ಹಾರಂಗಿ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹಿಸದಂತೆ ಸೂಚಿಸಲಾಗಿದೆ. ಜುಲೈ 7ರಂದು ಪದೇ ಪದೇ ಭೂಕಂಪ ಸಂಭವಿಸುತ್ತಿರುವ ಚೆಂಬು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.