ಪೊನ್ನಂಪೇಟೆ (ಕೊಡಗು ಜಿಲ್ಲೆ): ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಯಾವುದೇ ವಿಡಿಯೊ ದಾಖಲೆಗಳಿದ್ದರೂ ಕೊಡಲಿ. ಆದರೆ, ಸುಮ್ಮನೆ ಹೇಳಿಕೆ ಕೊಡುವುದು ಸರಿಯಲ್ಲ. ಅವರಿಗೆ ಹೇಳಿಕೆ ನೀಡುವ ಚಟ ಇರಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.
ಸಂತೋಷ್ ಆತ್ಮಹತ್ಯೆ ಯತ್ನ ಅವರ ವೈಯಕ್ತಿಕ ವಿಚಾರವಾಗಿದ್ದು ಪಕ್ಷ ಅಥವಾ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ಡಿ.ಕೆ.ಶಿವಕುಮಾರ್ ಅಡಿಯೊ, ವಿಡಿಯೊ ಇದೆ ಎಂದು ಹೇಳಿಕೆ ನೀಡಿ ರಾಜಕೀಯವಾಗಿ ಪ್ರಕರಣವನ್ನು ಪರಿವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ. ಯಾವುದೇ ರೀತಿಯ ಭಿನ್ನಮತ ಪಕ್ಷದೊಳಗಿಲ್ಲ. ನಾನು ದೆಹಲಿಗೆ ಹೋಗಿದ್ದೆ. ಅಲ್ಲಿಯೂ ನಾಯಕತ್ವ ಬದಲಾವಣೆ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಶಂಕರ್, ಮುನಿರತ್ನ ಹಾಗೂ ಎಂ.ಟಿ.ನಾಗರಾಜ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂದು ಹೇಳಿದರು.
ಸಚಿವ ನಾರಾಯಣಗೌಡ ಮಾತನಾಡಿ, ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಔಷಧಿ ವ್ಯತಿರಿಕ್ತ ಪರಿಣಾಮ ಬೀರಿದ್ದರಿಂದ ಅಸ್ವತ್ಥಗೊಂಡಿದ್ದರು. ಈಗ ಅವರು ಗುಣಮುಖರಾಗುತ್ತಿದ್ದಾರೆ. ನಾನೂ ಸಹ ಅವರ ಆರೋಗ್ಯವನ್ನು ವಿಚಾರಿಸಿದ್ದೇನೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.