ADVERTISEMENT

64 ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಮನವಿ

ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತವಾಗಿ ಸಲ್ಲಿಸಿ: ಡಿಸಿ ಸಲಹೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 6:02 IST
Last Updated 21 ಸೆಪ್ಟೆಂಬರ್ 2024, 6:02 IST
ಕೊಡಗು ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾಗವಹಿಸಿದ್ದರು.
ಕೊಡಗು ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾಗವಹಿಸಿದ್ದರು.   

ಮಡಿಕೇರಿ: ಕೊಡಗು ಜಿಲ್ಲೆಯ 64 ಮಾರ್ಗಗಳಲ್ಲಿ ಕೆಎಸ್‍ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತವಾಗಿ ಸಲ್ಲಿಸುವಂತೆ ಖಾಸಗಿ ಬಸ್ ಮಾಲೀಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಬೇಡಿಕೆ ಸಂಬಂಧ ಈಗಾಗಲೇ ಕೆಎಸ್‍ಆರ್‌ಟಿಸಿ ಬಸ್ ಸಂಚಾರದ ಬಗ್ಗೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸರ್ವೇ ಮಾಡಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಖಾಸಗಿ ಬಸ್ ಸಂಸ್ಥೆಯವರು ಅಕ್ಟೋಬರ್ ಕೊನೆ ವಾರದಲ್ಲಿ ನಡೆಯುವ ಸಭೆಗೂ ಮುಂಚಿತವಾಗಿ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಖಾಸಗಿ ಬಸ್‍ಗಳ ಓಡಾಟಕ್ಕೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಸಾರಿಗೆ ಸಂಪರ್ಕಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ. ಎಲ್ಲರೂ ಸಹಕಾರ ಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಬಸ್‌ ಸಂಚಾರ ಸಂಬಂಧ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳು ಹೀಗೆ ಪ್ರತಿಯೊಬ್ಬರಿಗೂ ಅನುಕೂಲವಾಗಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಖಾಸಗಿ ಬಸ್ ಸಂಸ್ಥೆಗಳ ಪರವಾಗಿ ಮಾತನಾಡಿದ ವಕೀಲರು ಬಸ್‍ಗಳ ವೇಳಾಪಟ್ಟಿಯಂತೆ ಯಾವುದೇ ಬಸ್‌ಗಳು ಅರ್ಧಗಂಟೆಗೊಮ್ಮೆ ಸಂಚರಿಸುವಂತಾಗಬೇಕು ಎಂದು ಎಂದು ಕೋರಿದರು.

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್ ಜೋಯಪ್ಪ ಮಾತನಾಡಿ, ‘ಕೋವಿಡ್ ನಂತರ ಖಾಸಗಿ ಬಸ್‍ಗಳು ನಷ್ಟದಲ್ಲಿ ಸಂಚರಿಸುತ್ತಿವೆ. ಆದ್ದರಿಂದ ಖಾಸಗಿ ಬಸ್‍ಗಳ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಹಿಂದಿನಿಂದಲೂ ಸಾರ್ವಜನಿಕರಿಗಾಗಿ ಖಾಸಗಿ ಬಸ್‍ಗಳು ಸಂಚರಿಸುತ್ತಿವೆ. ಜಿಲ್ಲೆಯ ಕುಗ್ರಾಮಗಳಲ್ಲೂ ಖಾಸಗಿ ಬಸ್‍ಗಳು ಓಡಾಡುತ್ತಿವೆ ಎಂದು ಅವರು ಸಭೆಯ ಗಮನಕ್ಕೆ ತಂದರು.

ಈ ವೇಳೆ ಮಾತನಾಡಿದ ಕೆಎಸ್‍ಆರ್‌ಟಿಸಿ ಸಂಸ್ಥೆಯ ವಿಭಾಗದ ಡಿಟಿಒ ಜೈಶಾಂತ, ‘ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಜಿಲ್ಲೆಯಲ್ಲಿ 64 ಮಾರ್ಗಗಳಲ್ಲಿ ಕೆಎಸ್‍ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲೆಯಾದ್ಯಂತ ಕೆಎಸ್‍ಆರ್‌ಟಿಸಿ ಬಸ್ ಕಲ್ಪಿಸುವಂತೆ ಸಾರ್ವಜನಿಕರಿಂದ ಸಾಕಷ್ಟು ಬೇಡಿಕೆ, ಮನವಿ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಬಸ್ ಸಂಚಾರಕ್ಕೆ ಪರವಾನಗಿ ನೀಡುವಂತೆ ಅವರು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರ್, ಖಾಸಗಿ ಬಸ್ ಮಾಲಿಕರು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.